
ಇತ್ತೀಚೆಗಷ್ಟೇ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳಲ್ಲಿ ಜಯಗಳಿಸಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟವನ್ನು ನಡೆಸಲಿದೆ. ಎಲ್ಲಾ ಈ ಹಿಂದಿನ ಯೋಜನೆಯ ಪ್ರಕಾರವೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.
ಹೀಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು ಈಗಾಗಲೇ ಕ್ರೀಡಾಂಗಣ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕಠಿಣ ಅಭ್ಯಾಸವನ್ನು ಆರಂಭಿಸಿದ್ದಾರೆ. ಮೈದಾನದಲ್ಲಿ ಬೆವರಿಳಿಸಿ ಅಭ್ಯಾಸ ನಡೆಸುವುದರ ಜೊತೆಗೆ ಫೋಟೋ ಶೂಟ್, ರಾತ್ರಿಯ ಉಪಾಹಾರ ಕೂಟ ಮತ್ತು ಇನ್ನಿತರ ಮನರಂಜನಾ ಚಟುವಟಿಕೆಗಳಲ್ಲಿಯೂ ಕೂಡ ಟೀಮ್ ಇಂಡಿಯಾ ಆಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದರ ಜತೆಗೆ ಇದೀಗ ಬಿಸಿಸಿಐ ಇಬ್ಬರು ಕನ್ನಡಿಗರನ್ನು ಒಟ್ಟುಗೂಡಿಸಿ ಇಬ್ಬರ ನಡುವೆ ವಿಶೇಷ ಪರಸ್ಪರ ಚರ್ಚೆ ನಡೆಯುವುದಕ್ಕೆ ಕಾರಣವಾಗಿದೆ. ಹೌದು, ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು ಈ ವಿಡಿಯೋದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಪರಸ್ಪರ ಮಾತನಾಡಿಕೊಳ್ಳುವುದರ ಮೂಲಕ ತಮ್ಮ ಆರಂಭದ ದಿನಗಳು ಮತ್ತು ಟೆಸ್ಟ್ ಕ್ರಿಕೆಟ್ ಜೀವನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಈ ವಿಡಿಯೋದಲ್ಲಿ ಮಾತನಾಡುವಾಗ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಮೂಲಕವೇ ನಾನು ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಮಾದರಿಗೆ ಪದಾರ್ಪಣೆ ಮಾಡಿದೆ ಆದರೆ ಆ ಸರಣಿಯಲ್ಲಿ ತಾನು ಉತ್ತಮ ಪ್ರದರ್ಶನವನ್ನು ನೀಡಲಾಗಲಿಲ್ಲ ಎಂದು ಕೆಎಲ್ ರಾಹುಲ್ ತಮ್ಮ ಆರಂಭದ ಟೆಸ್ಟ್ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಹಾಗೂ ಕಳೆದ ಆರೇಳು ತಿಂಗಳುಗಳ ಹಿಂದೆ ತಾನು ಮತ್ತೆ ಅಂತರರಾಷ್ಟ್ರೀಯ ಟೆಸ್ಟ್ ಜರ್ಸಿಯನ್ನು ತೊಟ್ಟು ಕಣಕ್ಕಿಳಿಯುತ್ತೇನೆ ಎಂದು ಊಹೆ ಕೂಡ ಮಾಡಿರಲಿಲ್ಲ ಎಂದು ಕೆಎಲ್ ರಾಹುಲ್ ಮಯಾಂಕ್ ಅಗರ್ವಾಲ್ ಬಳಿ ಈ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಹಾಗೂ ಇನ್ನೂ ಮುಂದುವರೆದು ತನಗೆ ಲಭಿಸಿರುವ ಉಪನಾಯಕನ ಪಟ್ಟದ ಕುರಿತು ಮಾತನಾಡಿರುವ ಕೆ ಎಲ್ ರಾಹುಲ್ ತನಗೆ ಈ ದೊಡ್ಡ ಮಟ್ಟದ ಜವಾಬ್ದಾರಿ ಲಭಿಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ ಮತ್ತು ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವುದಾಗಿ ವಿಶ್ವಾಸವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಹೌದು, ಇತ್ತೀಚೆಗಷ್ಟೇ ಭಾರತ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿದ್ದ ಬಿಸಿಸಿಐ ಉಪನಾಯಕನ ಸ್ಥಾನಕ್ಕೆ ಕೆ ಎಲ್ ರಾಹುಲ್ ಅವರನ್ನು ನೇಮಿಸಿದ್ದಷ್ಟೇ ಅಲ್ಲದೆ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ ಈ ಸರಣಿಯಲ್ಲಿ ಟೆಸ್ಟ್ ಉಪನಾಯಕನ ಸ್ಥಾನವನ್ನು ಕೂಡ ಕೆಎಲ್ ರಾಹುಲ್ ಪಡೆದುಕೊಂಡಿದ್ದಾರೆ.
ಇನ್ನು ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ನಡುವಿನ ಈ ವಿಶೇಷ ಚರ್ಚೆಯ ಸಂಪೂರ್ಣ ವಿಡಿಯೋವನ್ನು ಬಿಸಿಸಿಐ ತನ್ನ ಬಿಸಿಸಿಐ ಟಿವಿ ವೆಬ್ ತಾಣದಲ್ಲಿ ಪ್ರಕಟಿಸಿದೆ. ಹಾಗೂ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಅವರ ಈ ವಿಶೇಷ ವಿಡಿಯೋ ನೋಡಿದ ನೆಟ್ಟಿಗರು ಇಬ್ಬರ ಬ್ರೊಮ್ಯಾನ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.