ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಬೇಕಿದೆ. ಇತ್ತಂಡಗಳ ನಡುವೆ ಈಗಾಗಲೇ ಟೆಸ್ಟ್ ಸರಣಿ ಆರಂಭವಾಗಿದ್ದು, ಪ್ರಥಮ ಪಂದ್ಯ ಕೂಡ ಈಗಾಗಲೇ ಮುಗಿದಿದೆ. ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಿತ್ತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 113 ರನ್ಗಳ ಬೃಹತ್ ಗೆಲುವನ್ನು ದಾಖಲಿಸುವುದರ ಮೂಲಕ ನೂತನ ದಾಖಲೆ ಬರೆಯಿತು.
ಹೀಗೆ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದ ದಾಖಲೆ ಬರೆದ ಟೀಮ್ ಇಂಡಿಯಾ ಇದೀಗ ಮುಂಬರುವ 2 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಇಡೀ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಈ ಟೆಸ್ಟ್ ಸರಣಿ ಮುಗಿಯುತ್ತಿದ್ದಂತೆ ಜನವರಿ 19ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ ಆರಂಭವಾಗಲಿದ್ದು 3 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮತ್ತು ಹರಿಣಗಳ ನಡುವೆ ಹಣಾಹಣಿ ನಡೆಯಲಿದೆ.
ಈ ಆಟಗಾರರಿರುವ ಭಾರತ ತಂಡ ವಿಶ್ವದ ಯಾವುದೇ ದೇಶದಲ್ಲಿ ಬೇಕಾದರೂ ಗೆಲ್ಲಲಿದೆ: ತೆಂಡೂಲ್ಕರ್ ಮೆಚ್ಚುಗೆ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲಿಗೆ ಟೆಸ್ಟ್ ಸರಣಿ ನಡೆಯುವ ಕಾರಣದಿಂದಾಗಿ ಟೀಮ್ ಇಂಡಿಯಾ ಕೇವಲ ಟೆಸ್ಟ್ ತಂಡವನ್ನು ಮಾತ್ರ ಪ್ರಕಟಿಸಿತ್ತು. ಹಾಗೂ ಇದೇ ಸಮಯಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂಬ ದೊಡ್ಡ ಸ್ಫೋಟಕ ಸುದ್ದಿಯನ್ನೂ ಕೂಡ ಬಿಸಿಸಿಐ ಹೊರಹಾಕಿತ್ತು. ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ತೆಗೆದು ಹಾಕಿದ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿತ್ತು.
ಹೀಗೆ ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ರೋಹಿತ್ ಶರ್ಮಾ ಹೆಗಲಿಗೆ ಭಾರತ ಏಕದಿನ ತಂಡದ ನಾಯಕತ್ವವನ್ನು ಹಾಕಿದ ಬೆನ್ನಲ್ಲೇ ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ರೋಹಿತ್ ಶರ್ಮಾ ಗಾಯದ ಸಮಸ್ಯೆಗೆ ಒಳಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದರು. ಇನ್ನು ಟೆಸ್ಟ್ ಸರಣಿಯಿಂದ ಹೊರಬಿದ್ದ ರೋಹಿತ್ ಶರ್ಮಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಸ್ ಪಡೆದುಕೊಳ್ಳಲು ಶ್ರಮಿಸಿದ್ದು ಇನ್ನೂ ಸಹ ಫಿಟ್ ಆಗದ ಕಾರಣ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಭಾರತ ಏಕದಿನ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಹೆಗಲಿಗೆ ಬಿಸಿಸಿಐ ಹಾಕಿದೆ.
WTC 2021-23: ಸೆಂಚುರಿಯನ್ ಟೆಸ್ಟ್ ಗೆದ್ದ ನಂತರವೂ ಅಂಕಪಟ್ಟಿಯಲ್ಲಿ ಏರಿಕೆ ಕಾಣದ ಭಾರತ
ಇತ್ತೀಚೆಗಷ್ಟೇ ರೋಹಿತ್ ಶರ್ಮಾ ಅಲಭ್ಯರಾದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಉಪನಾಯಕ ಸ್ಥಾನವನ್ನು ನಿರ್ವಹಿಸಿದ್ದ ಕೆಎಲ್ ರಾಹುಲ್ ಇದೀಗ ಭಾರತ ಏಕದಿನ ತಂಡದ ನಾಯಕತ್ವವನ್ನು ನಿರ್ವಹಿಸಲಿದ್ದು ಹೆಚ್ಚಿನ ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ.