ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಗುವಾಹಟಿ ತಲುಪಿವೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ಟೆಸ್ಟ್ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯ ಆಡಲಿದೆ. ಈ ವೇಳೆ ತಂಡಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿಕೊಳ್ಳುವ ನಿರೀಕ್ಷೆ ಇದೆ. ಈ ಸರಣಿಗಾಗಿ ಭಾರತ ತಂಡವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ಕೋಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಶುಭಮನ್ ಗಿಲ್ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ನೋವಿಗೆ ಗುರಿಯಾಗಿದ್ದರು. ಆ ಬಳಿಕ ಅವರು ಮೈದಾನದಿಂದ ಹೊರನಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇವರು ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪರ ಕಣಕ್ಕೆ ಇಳಿಯುತ್ತಾರೋ ಇಲ್ಲವೋ ಎಂಬುದೇ ಅನುಮಾನವಾಗಿದೆ. ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಗಿಲ್ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಬಗ್ಗೆ ಬಿಸಿಸಿಐ ಇನ್ನು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿಗೆ ಭಾರತ ತಂಡವನ್ನು ನವೆಂಬರ್ 23ರ ಸಂಜೆಯೊಳಗೆ ಘೋಷಿಸುವ ಸಾಧ್ಯತೆ ಇದೆ. ಏಕದಿನ ಸರಣಿಯಿಂದಲೂ ಗಿಲ್ ಅವರಿಗೆ ವಿಶ್ರಾಂತಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಶುಭಮನ್ ಗಿಲ್ ಬಗ್ಗೆ ಬಿಸಿಸಿಐ ವೈದ್ಯರು ಕಣ್ಣು ನೆಟ್ಟಿದ್ದಾರೆ. ಅಲ್ಲದೆ ಬಿಸಿಸಿಐ ಈ ವಿಚಾರದಲ್ಲಿ ಯಾವುದೇ ಆತುರವನ್ನು ಮಾಡಲು ಬಯಸುತ್ತಿಲ್ಲ. ಒಂದು ವೇಳೆ ಶುಭಮನ್ ಗಿಲ್ ಏಕದಿನ ಸರಣಿಯಿಂದಲೂ ಹೊರ ನಡೆದರೆ, ಭಾರತ ತಂಡಕ್ಕೆ ಮತ್ತೊಬ್ಬ ಹೊಸ ನಾಯಕ ಸಿಗಲಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತವರಿನ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಲು ತಯಾರಾಗಿದ್ದಾರೆ. ರೋಹಿತ್ ಶರ್ಮಾ ತಂಡಕ್ಕೆ ಎಂಟ್ರಿ ಪಡೆದರೂ ಸಹ ಬಿಸಿಸಿಐ ಇವರಿಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ತೀರಾ ಕಡಿಮೆ ಆಗಿದೆ. ಇನ್ನು ಆಸೀಸ್ ಪ್ರವಾಸದಲ್ಲಿ ತಂಡದ ಉಪನಾಯಕತ್ವ ವಹಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಸಹ ಗಾಯಕ್ಕೆ ತುತ್ತಾಗಿದ್ದಾರೆ. ಇವರು ಕ್ಯಾಚ್ ಹಿಡಿಯುವಾಗ ಗಾಯ ಮಾಡಿಕೊಂಡಿದ್ದರಿಂದ, ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಇವರು ಸಹ ಮೈದಾನಕ್ಕೆ ಇಳಿಯುವುದಿಲ್ಲ. ಹೀಗಿರುವಾಗ ಭಾರತ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ವೇಳೆ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಏಕದಿನ ಕ್ರಿಕೆಟ್ನಲ್ಲಿ ತಂಡವನ್ನು ಮುನ್ನಡೆಸಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.