ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳು ಅಂತ್ಯವಾಗಿದ್ದು ಎರಡು ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತನ್ನ ವಶಕ್ಕೆ ಪಡೆದುಕೊಂಡಿದೆ. ಇದೀಗ ಸರಣಿಯ ಅಂತಿಮ ಪಂದ್ಯ ಬಾಕಿಯಿದ್ದು ಭಾನುವಾರ ತಿರುವಂತಪುರಂನಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆಯಲು ವಿಫಲವಾಗಿದ್ದ ಇಬ್ಬರು ಪ್ರಮುಖ ಆಟಗಾರರೆಂದರೆ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್. ಟಿ20 ಮಾದರಿಯಲ್ಲಿ ಅಮೋಘ ಫಾರ್ಮ್ನಲ್ಲಿರುವ ಸೂರ್ಯಕುಮಾರ್ ಯಾದವ್ ಏಕದಿನ ಮಾದರಿಯಲ್ಲಿ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲವಾಗಿದ್ದಾರೆ. ಶ್ರೇಯಸ್ ಐಯ್ಯರ್ ಈ ಹಿಂದಿನ ಸರಣಿಗಳಲ್ಲಿ ನೀಡಿರುವ ಅಮೋಘ ಪ್ರದರ್ಶನದ ಕಾರಣದಿಂದಾಗಿ ಸೂರ್ಯಕುಮಾರ್ ಯಾದವ್ ಆಡುವ ಬಳಗದಿಂದ ಅನಿವಾರ್ಯವಾಗಿ ಹೊರಗುಳಿಯಬೇಕಾಯಿತು.
IND vs NZ: ನ್ಯೂಜಿಲೆಂಡ್ ವಿರುದ್ಧದ ಟಿ20, ಏಕದಿನ ಸರಣಿಗೆ ಭಾರತದ ಪ್ರತ್ಯೇಕ ತಂಡ ಪ್ರಕಟ
ಮತ್ತೊಂದೆಡೆ ಇಶಾನ್ ಕಿಶನ್ ಆಡಿರುವ ಅಂತಿಮ ಏಕದಿನ ಪಂದ್ಯದಲ್ಲಿ ಸ್ಪೋಟಕ ದ್ವಿಶತಕ ಸಿಡಿಸಿದ ಹೊರತಾಗಿಯೂ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿರಲಿಲ್ಲ. ಸ್ವತಃ ನಾಯಕ ರೋಹಿತ್ ಶರ್ಮಾ ಈ ಬಗ್ಗೆ ಮಾತನಾಡಿ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಈ ಹಿಂದೆ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಸ್ಥಿರ ಪ್ರದರ್ಶನ ನೀಡಿರುವ ಕಾರಣದಿಂದಾಗಿ ಆತನಿಗೆ ಹೆಚ್ಚಿನ ಅವಕಾಶ ನೀಡುವುದು ನ್ಯಾಯ ಎಂದಿದ್ದರು. ಹೀಗಾಗಿ ಮೊದಲ ಎರಡು ಪಂದ್ಯಗಳಲ್ಲಿಯೂ ಇಶಾನ್ ಕಿಶನ್ ಬೆಂಚ್ ಕಾಯಬೇಕಾಯಿತು.
ಇದೀಗ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಅವಕಾಶ ದೊರೆಯದ ಈ ಆಟಗಾರರಿಗೆ ಏಕದಿನ ಮಾದರಿಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ದೊರೆಯುವ ಸಾಧ್ಯತೆಯಿದೆ. ಶುಬ್ಮನ್ ಗಿಲ್ ಹಾಗೂ ಶ್ರೇಯಸ್ ಐಯ್ಯರ್ ಎರಡು ಅಕಾಶ ಪಡೆದುಕೊಂಡಿರುವ ಕಾರಣ ಅವರಿಗೆ ಏಕದಿನ ಮಾದರಿಯ ಅಂತಿಮ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟ
ಇನ್ನು ಬೌಲಿಂಗ್ ವಿಭಾಗದಲ್ಲಿಯೂ ಟೀಮ್ ಇಂಡಿಯಾ ಕನಿಷ್ಠ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಕೊನೆಯ ಪಂದ್ಯದಲ್ಲಿ ವಿಶ್ರಾಂತಿ ನೀಡಿ ಯುವ ವೇಗಿ ಅರ್ಷ್ದೀಪ್ ಸಿಂಗ್ಗೆ ಅವಕಾಶ ನೀಡಿದರೆ ಅಚ್ಚರಿಯಿಲ್ಲ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅರ್ಷ್ದೀಪ್ ಸಿಂಗ್ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ವಿಫಲವಾಗಿದ್ದರು. ಮೊದಲ ಪಂದ್ಯದಲ್ಲಿ ನೋಬಾಲ್ ಎಸೆಯುವ ಮೂಲಕ ಸಾಕಷ್ಟು ಟೀಕೆಗೆ ಗುರಿಯಾಗಿದ್ದರೆ ಎರಡನೇ ಪಂದ್ಯದಲ್ಲಿ ನೋಬಾಲ್ ನಿಯಂತ್ರಿಸಿದರಾದರೂ ವೈಟ್ ಎಸೆಯುವ ಮೂಲಕ ಲೆಂತ್ನಲ್ಲಿ ತಮ್ಮ ದೌರ್ಬಲ್ಯವನ್ನು ಬಹಿರಂಗಪಡಿಸಿದ್ದರು. ಇದೀಗ ಏಕದಿನ ಸರಣಿಯಲ್ಲಿ ಈ ಯುವ ವೇಗಿಗೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.