
ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸೆಣಿಯ ಮೊದಲ ಎರಡು ಪಂದ್ಯಗಳ ಮುಕ್ತಾಯವಾಗಿದ್ದು ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದು ಸದ್ಯ ಭಾರತದ ಚಿತ್ತ ವೈಟ್ವಾಶ್ ಮೇಲಿದೆ. ಈ ಸರಣಿಯ ಅಂತಿಮ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು ಶನಿವಾರ ಈ ಪಂದ್ಯ ನಡೆಯಲಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಲ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಕೆಲ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಕಾಯುತ್ತಿರುವ ಸೂರ್ಯಕುಮಾರ್ ಯಾದವ್ ಇಶಾನ್ ಕಿಶನ್ ಅವರಂತಾ ಆಟಗಾರರಿಗೆ ಅವಕಾಶ ದೊರೆಯುವ ನಿರೀಕ್ಷೆಯಿದೆ. ಬೌಲಿಂಗ್ನಲ್ಲಿಯೂ ತಂಡ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ 3ನೇ ಏಕದಿನ ಪಂದ್ಯ ಜನವರಿ 15 ಶನಿವಾರ ನಡೆಯಲಿದೆ. ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಮಧ್ಯಾಹ್ನ 1:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಈ ಪಂದ್ಯ ಸ್ಟಾರ್ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರವಾಗಲಿದ್ದು ಹಾಟ್ಸ್ಟಾರ್ನಲ್ಲಿಯೂ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.
ಕುತೂಹಲ ಮೂಡಿಸಿದೆ ನಾಯಕನ ನಿರ್ಧಾರ:
ಇನ್ನು ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಹಾಗೂ ಮ್ಯಾನೇಜ್ಮೆಂಟ್ನ ನಿರ್ಧಾರ ಹೇಗಿರಲಿದೆ ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ಅದ್ಭುತ ಫಾರ್ಮ್ನಲ್ಲಿದ್ದರೂ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ಗೆ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಅವಕಾಶ ದೊರೆಯಲೇ ಇಲ್ಲ. ಹೀಗಾಗಿ ಅವರಿಗೆ ಅವಕಾಶ ಮಾಡಿಕೊಡಲಿದ್ದಾರಾ ನಾಯಕ ರೋಹಿತ್ ಎಂಬುದು ಕುತೂಹಲ ಮೂಡಿಸಿದೆ. ಇದಕ್ಕಾಗಿ ಶುಬ್ಮನ್ ಗಿಲ್ ಹಾಗೂ ಶ್ರೇಯಸ್ ಐಯ್ಯರ್ ಅವರನ್ನು ಆಡುವ ಬಳಗದಿಂದ ಹೊರಗಿಡುವ ಸಾಧ್ಯತೆಯೂ ಇದೆ. ಇನ್ನು ಬೌಲಿಂಗ್ನಲ್ಲಿ ಮುಂಬರುವ ಸರಣಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು ಅರ್ಷ್ದೀಪ್ ಸಿಂಗ್ಗೆ ಅವಕಾಶ ದೊರೆಯಬಹುದು.
ಸಂಭಾವ್ಯ ತಂಡ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್/ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ನಾಯಕ), ಅವಿಷ್ಕ ಫೆರ್ನಾಂಡೋ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶಾನ್ ಮಧುಶಂಕ