
ನವದೆಹಲಿ, ಅಕ್ಟೋಬರ್ 25: ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ವಿಶ್ರಾಂತಿ ನೀಡಲಾಗಿದ್ದ ಭಾರತದ ಪ್ರಮುಖ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜಸ್ ಪ್ರೀತ್ ಬೂಮ್ರಾ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಪಂದ್ಯಗಳಿಗಾಗಿ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ಮಹಮ್ಮದ್ ಶಮಿ ಅವರನ್ನು ಉಳಿದ ಪಂದ್ಯಗಳಿಂದ ಕೈಬಿಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಭುವನೇಶ್ವರ್ ಕುಮಾರ್ ಮತ್ತು ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.
ಆದರೆ, ವೆಸ್ಟ್ ಇಂಡೀಸ್ ಬ್ಯಾಟ್ಸ್ಮನ್ಗಳು ಭಾರತದ ಈಗಿನ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವುದು ತಂಡದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಅನುಭವಿ ಬೌಲರ್ಗಳಿಗೆ ಬುಲಾವ್ ನೀಡುವುದು ಅನಿವಾರ್ಯವಾಗಿದೆ.
ಇತ್ತೀಚೆಗೆ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಬೂಮ್ರಾ ಮತ್ತು ಭುವನೇಶ್ವರ್ ಕ್ರಮವಾಗಿ ಎಂಟು ಮತ್ತು ಆರು ವಿಕೆಟ್ ಕಿತ್ತು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಮೊದಲ ಎರಡೂ ಪಂದ್ಯಗಳಲ್ಲಿ ಅಷ್ಟೇನೂ ಪರಿಣಾಮಕಾರಿ ಎನಿಸದ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಎರಡು ಪಂದ್ಯಗಳಲ್ಲಿ ಅವರು ಒಂದು ವಿಕೆಟ್ ಮಾತ್ರ ಪಡೆದುಕೊಂಡಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಮೂರನೇ ಪಂದ್ಯ ಅ. 27ರಂದು ಪುಣೆಯಲ್ಲಿ, ನಾಲ್ಕನೆಯ ಪಂದ್ಯ ಅ. 29ರಂದು ಮುಂಬೈ ಮತ್ತು ಐದನೇ ಪಂದ್ಯ ನವೆಂಬರ್ 1ರಂದು ತಿರುವನಂತಪುರಂನಲ್ಲಿ ನಡೆಯಲಿದೆ.
ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಕೆ.ಎಲ್. ರಾಹುಲ್, ಎಂಎಸ್ ಧೋನಿ (ವಿಕೆಟ್ ಕೀಪರ್), ರಿಷಬ್ ಪಂತ್, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೆ. ಖಲೀಲ್ ಅಹ್ಮದ್, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್ ಮತ್ತು ಜಸ್ ಪ್ರೀತ್ ಬೂಮ್ರಾ