
ಭಾರತ ಹಾಗೂ ವೆಸ್ಟ್ ಇಂಡಿಸ್ ನಡುವಿನ ಸೀಮಿತ ಓವರ್ಗಳ ಸರಣಿಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 6ರಿಂದ ಅಹದಾಬಾದ್ನಲ್ಲಿ ಏಕದಿನ ಸರಣಿ ಆರಂಬವಾಗಲಿದ್ದು ಅದಕ್ಕೂ ಮುನ್ನ ಭಾರತೀಯ ತಂಡದ ಸದಸ್ಯರು ಮೊದಲಿಗೆ ಮೂರು ದಿನಗಳ ಕ್ವಾರಂಟೈನ್ ಪೂರೈಸಲಿದ್ದಾರೆ. ಅದಾದ ಬಳಿಕ ಬಯೋಬಬಲ್ಗೆ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಸದಸ್ಯರು ಮೊದಲಿಗೆ ಕ್ವಾರಂಟೈನ್ ಪೂರೈಸುವ ಹಿನ್ನೆಲೆಯಲ್ಲಿ ಅಹಮದಾಬಾದ್ಗೆ ತಲುಪಿದ್ದಾರೆ.
ಈ ಸರಣಿಯಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಅಹಮದಾಬಾದ್ಗೆ ಪ್ರಯಾಣಿಸುತ್ತಿರುವ ಫೋಟೋ ಹಂಚಿಕೊಂಡಿರುವ ಚಾಹಲ್ ವಿಮಾನದ ಪಕ್ಕದಲ್ಲಿ ಟೀಮ್ ಇಂಡಿಯಾ ಅನುಭವಿ ಬ್ಯಾಟರ್ ಶಿಖರ್ ಧವನ್ ಕೂಡ ಇದ್ದಾರೆ. ಈ ಸರಣಿ ರೋಹಿತ್ ಶರ್ಮಾ ಏಕದಿನ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಮುನ್ನಡೆಸುತ್ತಿರುವ ಮೊದಲ ಏಕದಿನ ಸರಣಿಯಾಗಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಗಾಯದ ಕಾರಣದಿಂದಾಗಿ ಶರ್ಮಾ ಹೊರಗುಳಿದಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಎರಡು ತಂಡದಲ್ಲಿಯೂ ಮಾಜಿ ನಾಯಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ಈ ಏಕದಿನ ಸರಣಿಗೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗುತ್ತಿಲ್ಲ. ಎರಡನೇ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ತಂಡದ ಭಾಗವಾಗಲಿದ್ದಾರೆ.
ಇನ್ನು ಈ ಸರಣಿಗೆ ಭಾರತದ ಪ್ರಮುಖ ವೇಗದ ಬೌಲರ್ಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ಈ ಮಧ್ಯೆ ಎಡಗೈ ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಭಾರತ ತಂಡದಲ್ಲಿ ಮತ್ತೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿದ್ದರೂ ಕೊರೊನಾವೈರಸ್ ಕಾರಣದಿಂದ ಹೊರಗುಳಿದಿದ್ದ ವಾಶಿಂಗ್ಟನ್ ಸುಂದರ್ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.
ಇನ್ನು ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಭುವನೇಶ್ವರ್ ಕುಮಾರ್ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇನ್ನು ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಗಾಯದ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅಲಭ್ಯವಾಗಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿದೆ.
ಇನ್ನು ಕಳೆದ ಎರಡು ಆವೃತ್ತಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಈ ಬಾರಿ ಐಪಿಎಲ್ನಲ್ಲಿ ರವಿ ಬಿಷ್ಣೋಯ್ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದಾರೆ. ಇನ್ನು ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದ ದೀಪಕ್ ಹೂಡಾ ಭಾರತದ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.