
ಇತ್ತೀಚೆಗಷ್ಟೇ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿ, ಈ ಎರಡೂ ಸರಣಿಗಳಲ್ಲಿಯೂ ಸೋಲನ್ನು ಅನುಭವಿಸುವುದರ ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಹೀಗೆ ಭಾರತ ಪ್ರವಾಸವನ್ನು ಕೈಗೊಂಡ ನ್ಯೂಜಿಲೆಂಡ್ ತಂಡಕ್ಕೆ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳೆರಡರಲ್ಲೂ ಸೋಲುಣಿಸಿದ ಟೀಮ್ ಇಂಡಿಯಾ ಇದೇ ವರ್ಷ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಸೋಲು ಮತ್ತು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದರ ಪ್ರತೀಕಾರವನ್ನು ತೀರಿಸಿಕೊಂಡಿತು.
ಹೀಗೆ ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿರುವ ಭಾರತ ಇದೇ ತಿಂಗಳು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿದ್ದು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸಲಿದೆ. ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲಿಗೆ ಟೆಸ್ಟ್ ಸರಣಿ ನಡೆಯಲಿದ್ದು, ಚೊಚ್ಚಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಆರಂಭವಾಗಲಿದೆ. ಹೀಗಾಗಿ ಈಗಾಗಲೇ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ 21 ಆಟಗಾರರ ಟೆಸ್ಟ್ ತಂಡವನ್ನು ಪ್ರಕಟಿಸಿದ್ದರೆ, ಇತ್ತ ಬಿಸಿಸಿಐ 18 ಆಟಗಾರರ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಿದೆ.
ಹೀಗೆ ಇತ್ತಂಡಗಳ ನಡುವೆ ನಡೆಯಲಿರುವ ಟೆಸ್ಟ್ ಸರಣಿಗೆ ಎರಡೂ ತಂಡಗಳನ್ನು ಪ್ರಕಟಿಸಿದ ನಂತರ ಎರಡೂ ತಂಡಗಳ ನಡುವೆ ಹೋಲಿಕೆ ಮತ್ತು ಚರ್ಚೆಗಳು ಆರಂಭವಾಗಿದ್ದು, ಇತ್ತಂಡಗಳಲ್ಲಿ ಯಾವ ತಂಡ ಜಯಭೇರಿ ಬಾರಿಸಲಿದೆ ಎಂಬುದರ ಕುರಿತು ಕೂಡ ಚರ್ಚೆಗಳು ಆರಂಭವಾಗಿವೆ. ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಯಾವ ತಂಡ ಜಯಭೇರಿ ಬಾರಿಸಲಿದೆ ಎಂಬುದರ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ತಮ್ಮ ಊಹೆಗಳನ್ನು ವ್ಯಕ್ತಪಡಿಸುತ್ತಿದ್ದು, ಈ ಕುರಿತಾಗಿ ಇದೀಗ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಪ್ರತಿಕ್ರಿಯಿಸಿದ್ದಾರೆ.
"ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುತ್ತಿರುವ ಭಾರತ ತಂಡಕ್ಕೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲಲು ಇದು ಬಂಗಾರದಂತಹ ಅವಕಾಶ ಎನ್ನಬಹುದು. ನಾವು ದಕ್ಷಿಣ ಆಫ್ರಿಕಾ ತಂಡವನ್ನು ಗಮನಿಸಿದರೆ ತಂಡ ಈ ಹಿಂದೆ ಇದ್ದಷ್ಟು ಬಲಿಷ್ಠವಾಗಿಲ್ಲ ಎಂಬುದು ತಿಳಿಯುತ್ತದೆ" ಎಂದು ಹರ್ಭಜನ್ ಸಿಂಗ್ ಹೇಳಿಕೆ ನೀಡಿದ್ದಾರೆ. ಈ ರೀತಿ ಹೇಳಿಕೆ ನೀಡುವುದರ ಮೂಲಕ ದಕ್ಷಿಣ ಆಫ್ರಿಕಾ ತಂಡ ಮೊದಲಿನಷ್ಟು ಬಲಿಷ್ಠವಾಗಿ ಇಲ್ಲದೇ ಇರುವುದರ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿರುವ ಭಾರತ ತಂಡ ಸುಲಭವಾಗಿ ಜಯ ಸಾಧಿಸಲಿದೆ ಎಂದು ಹರ್ಭಜನ್ ಸಿಂಗ್ ಊಹಿಸಿದ್ದಾರೆ.
"ಭಾರತ ಕೊನೆಯ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದಾಗಲೂ ಸಹ ಎಬಿ ಡಿವಿಲಿಯರ್ಸ್ ಮತ್ತು ಫಾಫ್ ಡು ಪ್ಲೆಸಿಸ್ ರೀತಿಯ ಆಟಗಾರರು ಭಾರತಕ್ಕೆ ಗೆಲ್ಲುವ ಅವಕಾಶವನ್ನು ನೀಡಿರಲಿಲ್ಲ. ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದ್ದರೂ ಒಮ್ಮೆಯೂ ಕೂಡ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲಾಗಲಿಲ್ಲ ಮತ್ತು ಈ ಬಾರಿಯ ಪ್ರವಾಸ ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲಲು ಉತ್ತಮ ಅವಕಾಶ. ಏಕೆಂದರೆ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ವಿಭಾಗ ಅಷ್ಟೊಂದು ಬಲಿಷ್ಠವಾಗಿಲ್ಲ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
ಭಾರತ ಟೆಸ್ಟ್ಗೆ ಪ್ರಕಟವಾಗಿರುವ ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್ (ನಾಯಕ), ಟೆಂಬಾ ಬವುಮಾ (ಉಪನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಐಡೆನ್ ಮಾರ್ಕ್ರಾಮ್, ವಿಯಾನ್ ಮಲ್ಡರ್, ಅನ್ರಿಚ್ ನಾರ್ಟ್ಜೆ, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್ಮನ್, ಪ್ರೆನೆಲನ್ ಸುಬ್ರಾಯೆನ್, ಸಿಸಾಂಡಾ ಮಗಾಲಾ, ರಯಾನ್ ರಿಕೆಲ್ಟನ್ ಮತ್ತು ಡುವಾನ್ನೆ ಒಲಿವಿಯರ್.
ದಕ್ಷಿಣ ಆಫ್ರಿಕಾ ಟೆಸ್ಟ್ಗೆ ಪ್ರಕಟವಾಗಿರುವ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ ( ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್) , ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್ ಮತ್ತು ಮೊಹಮ್ಮದ್ ಸಿರಾಜ್.