ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್ನಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ ಭಾರೀ ಮುನ್ನಡೆಯತ್ತ ಚಿತ್ತ ನೆಟ್ಟಿದೆ. ಆಸೀಸ್ ತಂಡದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಿದ್ದಾರೆ. ಇವರು ಕಲಾತ್ಮಕ ಆಟದ ಪ್ರದರ್ಶನ ನೀಡಿ ಶತಕ ಬಾರಿಸಿದರು. ಈ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಅಂಗಳಕ್ಕೆ ಇಳಿದಿದ್ದರು. ಹಾಗಿದ್ದರೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದು ಏಕೆ ಎಂಬುವುದಕ್ಕೆ ಉತ್ತರ ಇಲ್ಲಿದೆ.
ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಮೈದಾನದಲ್ಲಿ ಕಪ್ಪು ಪಟ್ಟಿ ಧರಿಸಿ ಆಡಿದರು. ಇದಕ್ಕೆ ಕಾರಣ ಡಿಸೆಂಬರ್ 26 ರ ರಾತ್ರಿ, ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾದರು. ಭಾರತ ಕಂಡ ಮಹಾನ್ ಅರ್ಥಶಾಸ್ತ್ರಜ್ಞ ಎಂದು ಗುರುತಿಸಲ್ಪಡುವ ಇವರು ಪ್ರಧಾನಿ ಹುದ್ದೆಯನ್ನು ಸಹ ಅಲಂಕರಿಸಿದ್ದರು. ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ದೇಶವೇ ಶೋಕದಲ್ಲಿ ಮುಳುಗಿದ್ದು, ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಭಾರತ ತಂಡವು ಮೈದಾನದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿಯಿತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ವರೆಗೆ ಪ್ರಧಾನಿ ಆಗಿದ್ದರು. ಇವರು ಸತತ ಎರಡು ಬಾರಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಮಹನಿಯರ ಸಾಲಿಗೆ ಸೇರುತ್ತಾರೆ. ದೇಶದ ಮಾಜಿ ಪ್ರಧಾನ ಮಂತ್ರಿಗಳ ಅಂತಿಮ ಸಂಸ್ಕಾರವನ್ನು ದೆಹಲಿಯ ವಿಶೇಷ ಸ್ಮಾರಕ ಸ್ಥಳಗಳಲ್ಲಿ ಮಾಡಲಾಗುತ್ತಿದೆ.
ಮನಮೋಹನ್ ಸಿಂಗ್ ನಿಧನಕ್ಕೆ ಕ್ರೀಡಾ ಪ್ರಪಂಚದ ಇತರ ಅನೇಕ ಮಾಜಿ ಆಟಗಾರರು ಸಹ ಅವರಿಗೆ ಗೌರವ ಸಲ್ಲಿಸಿದ್ದಾರೆ, ವೀರೇಂದ್ರ ಸೆಹ್ವಾಗ್, ಹರ್ಭಜನ್ ಮತ್ತು ಯುವರಾಜ್ ಸಿಂಗ್ ಸಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯ ಮೊದಲ ಇನಿಂಗ್ಸ್ನಲ್ಲಿ ದೊಡ್ಡ ಮೊತ್ತದತ್ತ ದಾಪುಗಾಲು ಇಟ್ಟಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 450ಕ್ಕೂ ಹೆಚ್ಚು ರನ್ ಗಳಿಸಿದ್ದು ದೊಡ್ಡ ಮೊತ್ತ ಕಲೆ ಹಾಕಿದೆ. ಈ ವೇಳೆ ಸ್ಟೀವನ್ ಸ್ಮಿತ್ 140 ರನ್ ಬಾರಿಸಿ ತಂಡಕ್ಕೆ ಆಧಾರವಾದರೆ, ನಾಯಕ ಪ್ಯಾಟ್ ಕಮಿನ್ಸ್ 49 ರನ್ ಸಿಡಿಸಿದರು.