ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಗಿದಿದೆ. ಸದ್ಯ ಭಾರತೀಯ ಆಟಗಾರರು ವಿಶ್ರಾಂತಿ ಮೂಡ್ನಲ್ಲಿ ಇದ್ದಾರೆ. ಪ್ರಸಕ್ತ ತಿಂಗಳಿನಲ್ಲಿ ಟೀಮ್ ಇಂಡಿಯಾ ಯಾವುದೇ ಟೂರ್ನಿಯಲ್ಲಿ ಭಾಗವಹಿಸುತ್ತಿಲ್ಲ. ಹೀಗಾಗಿ ಅಭಿಮಾನಿಗಳ ಚಿತ್ತವೆಲ್ಲ ಮುಂದಿನ ಸರಣಿಯ ಮೇಲೆ ನೆಟ್ಟಿದೆ. ಭಾರತ ದುಬೈನಲ್ಲಿ ನಡೆಯಲಿರುವ ಸರಣಿಯಲ್ಲಿ ಏಷ್ಯಾ ಕಪ್ ಟಿ20 ಸರಣಿಯಲ್ಲಿ ಭಾಗವಹಿಸಲಿದೆ. ಈ ಸರಣಿಗಾಗಿ ಭಾರತ ತಂಡವನ್ನು ಯಾವಾಗ ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಯಾವೆಲ್ಲಾ ಆಟಗಾರರಿಗೆ ಅವಕಾಶ ಸಿಗುವು ಸಾಧ್ಯತೆ ಇದೆ ಎಂಬ ಬಗ್ಗೆ ವರದಿ ಇಲ್ಲಿದೆ.
ಮುಂಬರುವ ಏಷ್ಯಾ ಕಪ್ಗಾಗಿ ಭಾರತ ತಂಡವನ್ನು ಇದೇ ತಿಂಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಏಷ್ಯಾ ಕಪ್ಗೆ ಭಾರತ ತಂಡವನ್ನು ಆಗಸ್ಟ್ ಮೂರನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಈ ತಂಡದಲ್ಲಿ ಸ್ಥಾನ ಪಡೆಯಲು ಹಲವು ಆಟಗಾರರು ಕಣ್ಣು ನೆಟ್ಟಿದ್ದಾರೆ. ಟೀಮ್ ಇಂಡಿಯಾದ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಸೇರಿದಂತೆ ಹಲವು ಭರವಸೆಯ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುವತ್ತ ಚಿತ್ತ ನೆಟ್ಟಿದ್ದಾರೆ. ಇನ್ನು ಮತ್ತೊಂದು ಮೂಲದ ಪ್ರಕಾರ ಈ ಆಟಗಾರರು ಭಾರತದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಅವಶ್ಯ ಇರುವುದರಿಂದ ಇವರನ್ನು ತಂಡದಲ್ಲಿ ಸೇರಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ.

ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುಂಬೈನ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಆರಂಭಿಕರಾಗಿ ಟಿ20 ಕ್ರಿಕೆಟ್ನ ನಂಬರ್ ಬ್ಯಾಟರ್ ಅಭಿಷೇಕ್ ಶರ್ಮಾ ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳುವುದು ಪಕ್ಕಾ ಆದಂತೆ ಕಾಣುತ್ತಿದೆ. ಇನ್ನು ಮೂರನೇ ಸ್ಥಾನದಲ್ಲಿ ತಿಲಕ್ ವರ್ಮಾ, ನಾಲ್ಕನೇ ಸ್ಥಾನದಲ್ಲಿ ಸೂರ್ಯ ಕಾಣಿಸಿಕೊಳ್ಳಬಹುದು. ಐದನೇ ಹಾಗೂ ಆರನೇ ಸ್ಥಾನದಲ್ಲಿ ಆಲ್ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಅವಕಾಶ ಪಡೆಯಬಹುದಾಗಿದೆ.
ಈ ಬಾರಿ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ದುಬೈನಲ್ಲಿ ನಡೆಯುತ್ತಿರುವುದರಿಂದ ಭಾರತ 3 ಸ್ಪಿನ್ ಬೌಲರ್ಗಳೊಂದಿಗೆ ಕಣಕ್ಕೆ ಇಳಿಯಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ ನುರಿತ ಸ್ಪಿನ್ ಬೌಲರ್ ಆಗಿ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಇನ್ನು ವೇಗದ ಬೌಲರ್ಗಳಾಗಿ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹೊಸ ಚೆಂಡನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ ಎಂದು ನಂಬಲಾಗಿದೆ. ಭಾರತ ಈ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಸೆ.10 ರಿಂದ ಆರಂಭಿಸಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಮಹತ್ವದ ಪಂದ್ಯ ಸೆಪ್ಟಂಬರ್ 14 ರಂದು ನಡೆಯಲಿದೆ.

ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇವುಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನವನ್ನು ಪಡೆಯುವ ತಂಡ ಸೂಪರ್ 4 ಹಂತಕ್ಕೆ ಪ್ರವೇಶಿಸಲಿದೆ. ಇನ್ನು ಸೂಪರ್ 4 ಹಂತದಲ್ಲಿ ಅಗ್ರ 2 ತಂಡಗಳು ಫೈನಲ್ನಲ್ಲಿ ಕಾದಾಟವನ್ನು ನಡೆಸಲಿವೆ.