ಸೆಪ್ಟಂಬರ್ 9 ರಂದು ಯುಎಇನಲ್ಲಿ ನಡೆಯಲಿರುವ ಏಷ್ಯಾ ಕಪ್ ಟಿ20 ಟೂರ್ನಿಗೆ ಭಾರತ ತಂಡವನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ. ಈ ವೇಳೆ ಯಾರಿಗೆ ಅವಕಾಶ ಸಿಗುತ್ತದೋ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ಸಭೆ ನಡೆಸಲಿದ್ದು, ಇದೇ ವೇಳೆ ತಂಡವನ್ನು ಪ್ರಕಟಿಸುವ ಸಂಭವ ಇದೆ. ಇನ್ನು ಟೀಮ್ ಇಂಡಿಯಾವನ್ನು ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಮುನ್ನಡೆಸುವ ಸಾಧ್ಯತೆ ಇದೆ.
ಗಾಯಕ್ಕೆ ತುತ್ತಾಗಿದ್ದ ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್, ಫಿಟ್ ಆಗಿದ್ದಾರೆ. ಇವರು ಈಗಾಗಲೇ ಎನ್ಸಿಎನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಇವರು ತಂಡವನ್ನು ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಆರಂಭಿಕರಾಗಿ ಕಣಕ್ಕೆ ಇಳಿಯುವುದು ಯಾರು ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಾಣಿಸಿಕೊಂಡಿರುವ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಇವರನ್ನು ಬಿಟ್ಟು ತಂಡದಲ್ಲಿ ಬೇರೆ ಆರಂಭಿಕರಾಗಿ ಕಣಕ್ಕೆ ಇಳಿಸುವ ಯೋಚನೆಯನ್ನು ಆಯ್ಕೆ ಸಮಿತಿ ಮಾಡುವ ಸಾಧ್ಯತೆ ಕಡಿಮೆ ಇದೆ. ಆದರೆ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಒಬ್ಬ ಪ್ಲೇಯರ್ಗೆ ಸ್ಥಾನ ಲಭಿಸುವ ಸಾಧ್ಯತೆ ಇದೆ.
ಇಂಗ್ಲೆಂಡ್ ಪ್ರವಾಸದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ನಾಯಕ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಅವರು ಟಿ20 ತಂಡಕ್ಕೆ ಕಂ ಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ. ಇವರಿಗೆ ತಂಡದಲ್ಲಿ ಸ್ಥಾನ ಲಭಿಸುತ್ತದಾ ಎಂಬ ಪ್ರಶ್ನೆಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಇನ್ನು ಟೀಮ್ ಇಂಡಿಯಾ ಪರ ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ವೇಗದ ಬೌಲಿಂಗ್ ಪ್ರದರ್ಶನ ನೀಡಿರುವ ಮೊಹಮ್ಮದ್ ಸಿರಾಜ್ ಸಹ ಬ್ಲ್ಯೂ ಜೆರ್ಸಿ ತೊಡುವ ಕನಸು ಕಾಣುತ್ತಿದ್ದಾರೆ.
ಟೀಮ್ ಇಂಡಿಯಾದಲ್ಲಿ ಫಿನಿಷರ್ ಆಗಿ ಯಾರಿಗೆ ಸ್ಥಾನ ಲಭಿಸುತ್ತದೆ ಎಂಬ ಬಗ್ಗೆ ಕುತೂಹಲ ಮನೆ ಮಾಡಿದೆ. ರಿಂಕು ಸಿಂಗ್, ಶಿವಂ ದುಬೆ, ಜಿತೇಶ್ ಶರ್ಮಾ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ಮೂವರಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎಂಬ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಇನ್ನು ಶ್ರೇಯಸ್ ಅಯ್ಯರ್ ಸಹ ಈ ಸ್ಥಾನದ ಮೇಲೆ ಕಣ್ಣು ಇಟ್ಟಿದ್ದಾರೆ.
ಏಷ್ಯಾ ಕಪ್ ಟಿ20 ತಂಡದಲ್ಲಿ ಎಷ್ಟು ಕನ್ನಡಿಗರಿಗೆ ಸ್ಥಾನ ಲಭಿಸುತ್ತದೆ ಎಂಬ ಬಗ್ಗೆ ಪ್ರಶ್ನೆಗಳು ಆರಂಭವಾಗಿವೆ. ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣಾ ತಂಡ ಸೇರುವ ಕನಸಿನಲ್ಲಿದ್ದಾರೆ. ಇನ್ನು ದೇವದತ್ ಪಡಿಕ್ಕಲ್ ಸಹ ತಂಡಕ್ಕೆ ಕಂ ಬ್ಯಾಕ್ ಮಾಡುವ ಕನಸಿನಲ್ಲಿದ್ದಾರೆ.