ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡ ಐಪಿಎಲ್ 2024ರಲ್ಲಿ ಈವರೆಗೆ ಆಡಿದ 13 ಪಂದ್ಯಗಳಿಂದ 4 ಗೆಲುವು ಮತ್ತು 9 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೇವಲ 8 ಅಂಕಗಳನ್ನು ಹೊಂದಿದೆ. ಈ ಮೂಲಕ ಐಪಿಎಲ್ 2024ರ ಪ್ಲೇಆಫ್ ರೇಸ್ನಿಂದ ಹೊರಬಿದ್ದ ಮೊದಲ ತಂಡವೆನಿಸಿತು.

2024ರ ಆವೃತ್ತಿ ಪ್ರಾರಂಭವಾಗುವ ಮೊದಲು, ರೋಹಿತ್ ಶರ್ಮಾ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ಪಾಳೆಯವು ಅಸ್ಥಿರವಾಗಿ ಕಂಡುಬಂದಿತು. ಗುಜರಾತ್ ಟೈಟನ್ಸ್ನಿಂದ ವ್ಯಾಪಾರಗೊಂಡಿದ್ದ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದು, ತಂಡದೊಳಗೆ ಬಿರುಕು ಮೂಡಲು ಕಾರಣವಾಯಿತು ಮತ್ತು ಇದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ.
ಕುತೂಹಲಕಾರಿಯಾಗಿ, ಮುಂಬೈ ಇಂಡಿಯನ್ಸ್ ತಂಡವು 2024ರ ಟಿ20 ವಿಶ್ವಕಪ್ನಲ್ಲಿ ಭಾರತ ಕ್ರಿಕೆಟ್ ತಂಡಕ್ಕಾಗಿ ಆಡುವ ನಾಲ್ಕು ಆಟಗಾರರನ್ನು ಹೊಂದಿದೆ. ನಾಯಕ ರೋಹಿತ್ ಶರ್ಮಾ, ಉಪನಾಯಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಈ ನಾಲ್ವರು ಪ್ರಮುಖ ಸದಸ್ಯರಾಗಿದ್ದಾರೆ. ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಆರಂಭಿಸಲಿದೆ.
ಹೊಸ ವರದಿಯ ಪ್ರಕಾರ, ಮುಂಬೈ ಇಂಡಿಯನ್ಸ್ನಲ್ಲಿನ ವಿಷಯಗಳು ಕಾಲಾನಂತರದಲ್ಲಿ ಶಾಂತಗೊಳ್ಳುವ ನಿರೀಕ್ಷೆಯಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆಗಲಿಲ್ಲ. ಅದು ಭಾರತ ತಂಡದ ಆಯ್ಕೆಯಲ್ಲಿಯೂ ಮುಂದುವರೆದಿದೆ.
15 ಸದಸ್ಯರ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಆಯ್ಕೆಗೆ ನಾಯಕ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಕೆಲವು ಬಿಸಿಸಿಐ ಆಯ್ಕೆಗಾರರು ವಿರೋಧಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ದೈನಿಕ್ ಜಾಗರಣ್ ವರದಿ ಮಾಡಿದೆ.

ಐಪಿಎಲ್ 2024ರಲ್ಲಿ ಹಾರ್ದಿಕ್ ಪಾಂಡ್ಯ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಿಲ್ಲ. ಆಡಿದ 13 ಪಂದ್ಯಗಳಲ್ಲಿ 144.93ರ ಸ್ಟ್ರೈಕ್ ರೇಟ್ನಲ್ಲಿ 200 ರನ್ ಗಳಿಸಿದ್ದಾರೆ ಮತ್ತು 10.59ರ ಎಕಾನಮಿ ದರದಲ್ಲಿ 13 ಪಂದ್ಯಗಳಲ್ಲಿ 11 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಹೆಚ್ಚಿನ ಉತ್ತಮ ಬೌಲಿಂಗ್ ಪ್ರದರ್ಶನಗಳು ಪಂದ್ಯಾವಳಿಯ ದ್ವಿತೀಯಾರ್ಧದಲ್ಲಿ ಬಂದಿವೆ. ಆದರೆ ಅದು ತಂಡವು ಪ್ಲೇಆಫ್ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ.
ಯಾವುದೋ 'ಒತ್ತಡದಲ್ಲಿ' ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದೂ ವರದಿ ಹೇಳಿದೆ. ಏಕೆಂದರೆ, ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಸ್ವರೂಪವನ್ನು ತ್ಯಜಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಟಿ20 ವಿಶ್ವಕಪ್ ತಂಡದ ಆಯ್ಕೆಯ ನಂತರ ರೋಹಿತ್ ಶರ್ಮಾ ಮತ್ತು ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ಕರೆದರು. ಆಗ, ಮುಖ್ಯ ಆಯ್ಕೆಗಾರರಿಗೆ ಕಳಪೆ ಫಾರ್ಮ್ ಹೊರತಾಗಿಯೂ ಟಿ20 ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಅವರ ಸೇರ್ಪಡೆಯ ಬಗ್ಗೆ ಪ್ರಶ್ನಿಸಲಾಯಿತು.
ಈ ವೇಳೆ ವೇಗದ-ಬೌಲಿಂಗ್ ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯಗೆ ಯಾವುದೇ ರೀತಿಯ ಬದಲಿ ಆಟಗಾರ ಲಭ್ಯವಿಲ್ಲದ ಕಾರಣ, ಆಯ್ಕೆ ಸಮಿತಿಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಅಜಿತ್ ಅಗರ್ಕರ್ ವಿವರಿಸಿದರು.