ನವೆಂಬರ್ 14 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಶುಭಮನ್ ಗಿಲ್ ಅವರಿಗೆ ಪಟ್ಟ ಕಟ್ಟಲಾಗಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡಕ್ಕೆ ಮರಳುತ್ತಲೇ ಮತ್ತೆ ಉಪನಾಯಕನ ಸ್ಥಾನವನ್ನು ನೀಡಲಾಗಿದೆ. ರಣಜಿಯಲ್ಲಿ ಸ್ಥಿರ ಪ್ರದರ್ಶನ ನೀಡಿದರೂ ಕನ್ನಡಿಗ ಕರುಣ್ ನಾಯರ್ ಅವರಿಗೆ ಸ್ಥಾನ ನೀಡುವಲ್ಲಿ ಬಿಸಿಸಿಐ ಆಯ್ಕೆ ಸಮಿತಿ ವಿಫಲವಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಮಹತ್ವದ ಬದಲಾವಣೆಗಳು ಕಂಡು ಬಂದಿಲ್ಲ.
ಭಾರತದಲ್ಲಿ ನಡೆಯುವ ಟೆಸ್ಟ್ ಪಂದ್ಯಗಳಿಗೆ ಕನ್ನಡಿಗ ಪ್ರಸಿದ್ಧ ಕೃಷ್ಣಾ ಅವರಿಗೆ ತಂಡದಿಂದ ಕೈ ಬಿಡಲಾಗಿದೆ. ಇನ್ನು ಕರ್ನಾಟಕದ ಇಬ್ಬರು ಸ್ಟಾರ್ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ ಮನಮೋಹಕ ಬ್ಯಾಟಿಂಗ್ ನಡೆಸಿ, ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಇನ್ನು ದೇವದತ್ ಪಡಿಕ್ಕಲ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಇವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಚಾನ್ಸ್ ಸಿಗುತ್ತದಾ ಕಾದು ನೋಡಬೇಕಿದೆ.

ಇಂಗ್ಲೆಂಡ್ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ರಿಷಭ್ ಪಂತ್ ಮತ್ತೆ ತಂಡಕ್ಕೆ ಎಂಟ್ರಿ ಪಡೆದಿದ್ದಾರೆ. ಇವರು ಬರುತ್ತಿದ್ದಂತೆ ರವೀಂದ್ರ ಜಡೇಜಾ ಅವರಿಗೆ ಕಳೆದ ಸರಣಿಯಲ್ಲಿ ನೀಡಿದ್ದ ಉಪನಾಯಕನ ಪಟ್ಟವನ್ನು ಕಸಿದುಕೊಂಡಿದ್ದಾರೆ. ಧ್ರುವ್ ಜುರೇಲ್ ಸರಣಿಯಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ವೇಗದ ಬೌಲಿಂಗ್ನಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಎದುರಾಳಿಗಳನ್ನು ಕಾಡಲಿದ್ದಾರೆ. ಇನ್ನು ಸ್ಪಿನ್ ವಿಭಾಗದಲ್ಲಿ ರಿಸ್ಟ್ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್, ವಾಶಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಆಕ್ಷರ್ ಪಟೇಲ್ ಇದ್ದಾರೆ. ಕುಲ್ದೀಪ್ ಅವರನ್ನು ಹೊರತು ಪಡಿಸಿದರೆ ಮಿಕ್ಕ 3 ಆಟಗಾರರು ಆಲ್ರೌಂಡರ್ ಕೆಟಗಿರಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಕರುಣ್ ನಾಯರ್ಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಇದಾದ ಬಳಿಕ ಇವರು ರಣಜಿ ಟ್ರೋಫಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದ್ದಾರೆ. ಇವರು ಆಡಿದ ಮೂರು ಪಂದ್ಯಗಳಲ್ಲಿ 2 ಶತಕ ಹಾಗೂ 1 ಅರ್ಧಶತಕ ಬಾರಿಸಿ ಟೆಸ್ಟ್ ಸರಣಿಗೆ ಕಂ ಬ್ಯಾಕ್ ಮಾಡುವ ಕನಸು ಕಂಡಿದ್ದರು. ಆದರೆ ಈ ಆಸೆ ನುಚ್ಚು ನೂರಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ದೇವದತ್ತ್ ಪಡಿಕ್ಕಲ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಮತ್ತು ಆಕಾಶ್ ದೀಪ್.