ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದಾಗಿನಿಂದ ಸತತ 4 ಪಂದ್ಯಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಉತ್ತುಂಗದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ರೇಕ್ ಹಾಕಿದೆ.
ಭಾನುವಾರ ( ಏಪ್ರಿಲ್ 25 ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಚೆನ್ನೈ 69 ರನ್ಗಳ ಅಮೋಘ ಜಯವನ್ನು ಸಾಧಿಸಿತು. ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿತ್ತು. ನಂತರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯಗಳಿಸಿದ ಪರಿಣಾಮ ಅಂಕಪಟ್ಟಿಯಲ್ಲಿ ಆರ್ಸಿಬಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಮಂಗಳವಾರ ( ಏಪ್ರಿಲ್ 27 ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಲಹೆಯೊಂದನ್ನು ನೀಡಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಡೇನಿಯಲ್ ಕ್ರಿಶ್ಚಿಯನ್ ಅವರನ್ನು ಕೈಬಿಟ್ಟು ಡೇನಿಯಲ್ ಸ್ಯಾಮ್ಸ್ ಅವರಿಗೆ ಅವಕಾಶವನ್ನು ನೀಡಬೇಕು ಎಂದು ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್, ನಾಲ್ಕನೇ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಆಡಿದರೆ, ಐದನೇ ಕ್ರಮಾಂಕದಲ್ಲಿ ಸುಂದರ್ ಅಥವಾ ಡೇನಿಯಲ್ ಕ್ರಿಶ್ಚಿಯನ್ ಆಡಲೇಬೇಕು. ಹೀಗಾಗಿ ಡೇನಿಯಲ್ ಕ್ರಿಶ್ಚಿಯನ್ ಅವರನ್ನು ಆಡಿಸುವುದು ಅಷ್ಟೊಂದು ಸೂಕ್ತವಲ್ಲ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಡೆಲ್ಲಿ ವಿರುದ್ಧದ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇನಿಯಲ್ ಕ್ರಿಶ್ಚಿಯನ್ ಅವರ ಬದಲಿಗೆ ಡೇನಿಯಲ್ ಸ್ಯಾಮ್ಸ್ ಅವರನ್ನು ಆರಿಸಿಕೊಳ್ಳಬೇಕಿದೆ. ಈ ಮೂಲಕ ಐದನೇ ಕ್ರಮಾಂಕದಲ್ಲಿ ಡೇನಿಯಲ್ ಸ್ಯಾಮ್ಸ್ ಉತ್ತಮ ಆಟವನ್ನಾಡಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಆಕಾಶ್ ಚೋಪ್ರಾ ಸಲಹೆಯನ್ನು ನೀಡಿದ್ದಾರೆ.