ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿದೆ. ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಟೂರ್ನಿಯ ಮೊದಲ ಗೆಲುವನ್ನು ದಾಖಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 14 ರಂದು ನಡೆದ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಎರಡನೇ ಗೆಲುವನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ಕಳೆದ ಐಪಿಎಲ್ ಟೂರ್ನಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ಕಳಪೆ ಎಂಬ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು, ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ವಿಭಾಗ ಸಾಕಷ್ಟು ಪ್ರಮಾಣದಲ್ಲಿ ಬಲಿಷ್ಠಗೊಂಡಿದೆ.
ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್
ಇದೇ ವೇಳೆ ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದ ಕುರಿತು ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಇರ್ಫಾನ್ ಪಠಾಣ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಬೇಕೆಂದು ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಾಷಿಂಗ್ಟನ್ ಸುಂದರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಕಡ್ಡಾಯವಾಗಿ ಆಡಿಸಬೇಕು, ಇದರಿಂದ ಮ್ಯಾಕ್ಸ್ವೆಲ್ ನಾಲ್ಕು ಮತ್ತು ಎಬಿ ಡಿವಿಲಿಯರ್ಸ್ ಐದನೇ ಕ್ರಮಾಂಕದಲ್ಲಿ ಆಡಲು ಸಾಧ್ಯವಾಗುತ್ತದೆ. ಮೂರನೇ ಕ್ರಮಾಂಕದಲ್ಲಿ ಸುಂದರ್ ಪ್ರತಿ ಪಂದ್ಯದಲ್ಲಿಯೂ 25 ರಿಂದ 30 ರನ್ ಗಳಿಸಿಕೊಟ್ಟರೆ, ವಿರಾಟ್ ಕೊಹ್ಲಿ , ಮ್ಯಾಕ್ಸ್ವೆಲ್ ಮತ್ತು ಎಬಿ ಡಿವಿಲಿಯರ್ಸ್ ಉಳಿದ ಆಟವನ್ನು ನಿಭಾಯಿಸಿಕೊಳ್ಳಲಿದ್ದು ಬ್ಯಾಟಿಂಗ್ ವಿಭಾಗ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ಸಲಹೆ ನೀಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಭಾನುವಾರ ( ಏಪ್ರಿಲ್ 18 ) ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಆಡಲಿದ್ದು ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಈ ಬದಲಾವಣೆಯನ್ನು ಮಾಡಿಕೊಳ್ಳಲಿದೆಯಾ ಕಾದು ನೋಡಬೇಕು