
14ನೇ ಐಪಿಎಲ್ ಆವೃತ್ತಿಯ 30ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವನ್ನು ಇಂದು (ಸೋಮವಾರ, ಮೇ 3 ) ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ವೀಕ್ಷಿಸಲು ಅಭಿಮಾನಿ ಬಳಗ ಕಾತುರರಾಗಿದ್ದರು. ಬೆಂಗಳೂರು ತಂಡದ ಅಭಿಮಾನಿಗಳು ಕಳೆದ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಮಂಕಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲಿದೆ ಎಂಬ ನಿರೀಕ್ಷೆಯಲ್ಲಿದ್ದರು.
ಆದರೆ ಕ್ರೀಡಾಭಿಮಾನಿಗಳಿಗೆ ಬೆಂಗಳೂರು ಮತ್ತು ಕೊಲ್ಕತ್ತಾ ಪಂದ್ಯದ ಕುರಿತಾಗಿ ಬೇಸರದ ಸುದ್ದಿಯೊಂದು ಹೊರಬಿದ್ದಿದ್ದು ಸೋಮವಾರ (ಮೇ 3) ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ರದ್ದಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇಂದಿನ (ಸೋಮವಾರ, ಮೇ 3) ಪಂದ್ಯ ರದ್ದಾಗಲು ಕಾರಣ ಎಂದು ತಿಳಿದುಬಂದಿದೆ.
ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಕೊಲ್ಕತ್ತಾ ತಂಡದ ಇತರ ಸದಸ್ಯರಿಗೆ ಕೊರೊನಾ ಸೋಂಕು ನೆಗೆಟಿವ್ ಎಂದು ವರದಿ ಬಂದಿದೆ. ಆದರೆ ತಂಡದ ಪ್ಯಾಟ್ ಕಮಿನ್ಸ್ ಸೇರಿದಂತೆ ಕೆಲ ಆಟಗಾರರಿಗೆ ಅನಾರೋಗ್ಯ ಉಂಟಾಗಿರುವ ಕಾರಣದಿಂದ ಅವರನ್ನು ಐಸೋಲೇಷನ್ ಮಾಡಲಾಗಿದ್ದು ಅವರು ಪಂದ್ಯವನ್ನಾಡಲು ಅಲಭ್ಯರಾಗಿರುವ ಕಾರಣ ಪಂದ್ಯವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.