ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುವ ಆಟಗಾರ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೆರಡೂ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿವೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ತಲಾ 6 ಪಂದ್ಯಗಳನ್ನಾಡಿರುವ ಎರಡೂ ತಂಡಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಒಂದು ಪಂದ್ಯದಲ್ಲಿ ಸೋತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿ, 2 ಪಂದ್ಯಗಳಲ್ಲಿ ಸೋಲುಂಡಿದೆ.
ಹೀಗೆ ಅಂಕಪಟ್ಟಿಯಲ್ಲಿ ಸಹ ಉತ್ತಮ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ( ಏಪ್ರಿಲ್ 27 ) ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾದವು. ಈ ಪಂದ್ಯದಲ್ಲಿ ಎರಡೂ ತಂಡಗಳು ಸಹ ಅತ್ಯದ್ಭುತ ಪ್ರದರ್ಶನವನ್ನು ನೀಡಿ ಕೊನೆಯ ಎಸೆತದವರೆಗೂ ಸಹ ಪಂದ್ಯವನ್ನು ಕೊಂಡೊಯ್ದವು. ಕೊನೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಒಂದು ರನ್ನ ರೋಚಕ ಗೆಲುವನ್ನು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು.
ಈ ಪಂದ್ಯ ಮುಗಿದ ನಂತರ ಟೀಮ್ ಇಂಡಿಯಾದ ಹೆಡ್ ಕೋಚ್ ರವಿಶಾಸ್ತ್ರಿ ಈ ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದು ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಇಬ್ಬರೂ ಒಟ್ಟಿಗೆ ಇರುವ ಫೋಟೋ ಒಂದನ್ನು ಹಾಕಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೊಸ ವಿಜೇತರು ಹುಟ್ಟಿಕೊಳ್ಳಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಇಬ್ಬರೂ ಒಟ್ಟಿಗೇ ಇರುವ ಫೋಟೋವನ್ನು ಹಾಕುವುದರ ಮೂಲಕ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟ್ರೋಫಿಯನ್ನು ಗೆಲ್ಲಲಿದೆ ಎಂದು ರವಿಶಾಸ್ತ್ರಿ ಪರೋಕ್ಷವಾಗಿ ತಿಳಿಸಿದ್ದಾರೆ.