ಆ ಇಬ್ಬರು ಆಟಗಾರರಿಂದ ಸೂರ್ಯಕುಮಾರ್ ಯಾದವ್ಗೆ ಸರಿಯಾದ ಅವಕಾಶ ಸಿಗಲಿಲ್ಲ; ಗಂಭೀರ್ ಬೇಸರ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ, ಪ್ರಸ್ತುತ ರಾಜಕಾರಣಿ ಗೌತಮ್ ಗಂಭೀರ್ ಸದ್ಯ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ತಮ್ಮ ಕೆಲವೊಂದಷ್ಟು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಮಾತನಾಡಿರುವ ಗೌತಮ್ ಗಂಭೀರ್ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ಸೂರ್ಯಕುಮಾರ್ ಯಾದವ್ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸೂರ್ಯಕುಮಾರ್ ಯಾದವ್ ಬಗ್ಗೆ ತಪ್ಪಾದ ನಿರ್ಣಯವನ್ನು ತೆಗೆದುಕೊಂಡೆ ಎಂಬ ನೋವು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಪರ 2018ರಿಂದ ಆಡುತ್ತಿರುವ ಸೂರ್ಯಕುಮಾರ್ ಯಾದವ್ ತನ್ನ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಸ್ಸನ್ನು ಗೆದ್ದು, ಟೀಮ್ ಇಂಡಿಯಾ ಆಯ್ಕೆಗಾರರ ಗಮನವನ್ನು ಕೂಡ ಸೆಳೆದು ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿ, ಸದ್ಯ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಕೂಡ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ತಾನು ತೋರಿದ ಉತ್ತಮ ಪ್ರದರ್ಶನದಿಂದ ಇಂದು ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವಂತ ಆಟಗಾರನಾಗಿ ಸೂರ್ಯಕುಮಾರ್ ಯಾದವ್ ಬೆಳೆದು ನಿಂತಿದ್ದಾರೆ. ಹೀಗೆ ಯಶಸ್ಸಿನ ಹಾದಿಯಲ್ಲಿ ಮುಂದುವರಿಯುತ್ತಿರುವ ಸೂರ್ಯಕುಮಾರ್ ಯಾದವ್ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.

ಸೂರ್ಯಕುಮಾರ್ ಯಾದವ್ ಬಗ್ಗೆ ತಪ್ಪಾದ ನಿರ್ಣಯ ತೆಗೆದುಕೊಂಡಿದ್ದೆ
ಸೂರ್ಯಕುಮಾರ್ ಯಾದವ್ ಬಗ್ಗೆ ತಪ್ಪಾದ ನಿರ್ಣಯವನ್ನು ತೆಗೆದುಕೊಂಡ ನೋವು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ. ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡ ಸೇರುವ ಮುನ್ನ 2014ರಿಂದ 2017ರವರೆಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರನಾಗಿದ್ದರು. ಈ ಸಂದರ್ಭದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿದ್ದ ಗೌತಮ್ ಗಂಭೀರ್ ಸೂರ್ಯಕುಮಾರ್ ಯಾದವ್ ಅವರನ್ನು ಆರನೇ ಅಥವಾ ಏಳನೇ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಸುತ್ತಿದ್ದರಂತೆ. 'ಸೂರ್ಯ ಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಆಡಬೇಕಾದಂತಹ ಪ್ರತಿಭಾವಂತ ಬ್ಯಾಟ್ಸ್ಮನ್, ಆದರೆ ಆತನನ್ನು ನಾನು ಆರನೇ ಅಥವಾ ಏಳನೇ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಕೆಳಗಿಳಿಸುತ್ತಿದ್ದೆ. ಆತನನ್ನು ಮೂರನೇ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಸಿದ್ದಿದ್ದರೆ ತುಸು ಮುಂಚೆಯೇ ಅಂತಾರಾಷ್ಟ್ರೀಯ ತಂಡ ಪ್ರತಿನಿಧಿಸುವಷ್ಟು ಬೆಳೆಯುತ್ತಿದ್ದ. ಹೀಗಾಗಿ ಆತನನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಬದಲು ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿಸುತ್ತಿದ್ದ ನೋವು ಇಂದಿಗೂ ನನ್ನನ್ನು ಕಾಡುತ್ತಿದೆ' ಎಂದು ಗೌತಮ್ ಗಂಭೀರ್ ಬೇಸರ ವ್ಯಕ್ತಪಡಿಸಿದ್ದಾರೆ.

ಆ ಇಬ್ಬರು ತಂಡದಲ್ಲಿ ಇದ್ದ ಕಾರಣ ಸೂರ್ಯಕುಮಾರ್ ಯಾದವ್ಗೆ ಅವಕಾಶ ನೀಡಲಾಗುತ್ತಿರಲಿಲ್ಲ
ಗಂಭೀರ್ ನಾಯಕತ್ವದಲ್ಲಿ ಸೂರ್ಯಕುಮಾರ್ ಯಾದವ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರನಾಗಿದ್ದಾಗ ತಂಡದಲ್ಲಿ ಮನೀಷ್ ಪಾಂಡೆ ಮತ್ತು ಯೂಸುಫ್ ಪಠಾಣ್ ಕೂಡ ಇದ್ದರು. ಹೀಗಾಗಿ ಸೂರ್ಯಕುಮಾರ್ ಯಾದವ್ ಬದಲು ಈ ಇಬ್ಬರನ್ನೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸುತ್ತಿದ್ದೆ, ಹೀಗಾಗಿ ಈ ಇಬ್ಬರನ್ನು ಬಿಟ್ಟು ಸೂರ್ಯಕುಮಾರ್ ಯಾದವ್ಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಲಾಗಲಿಲ್ಲ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್ನನ್ನು ತಂಡದಿಂದ ಕೈಬಿಟ್ಟದ್ದು ಕೊಲ್ಕತ್ತಾಗೆ ದೊಡ್ಡ ನಷ್ಟ
ಇನ್ನೂ ಮುಂದುವರಿದು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಟ್ಟ ಕುರಿತಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಗೌತಮ್ ಗಂಭೀರ್ ಇಂತಹ ಅತ್ಯದ್ಭುತ ಆಟಗಾರನನ್ನು ತಂಡದಲ್ಲಿ ಇಟ್ಟುಕೊಳ್ಳದೆ ಕೈಬಿಟ್ಟದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಿಕೆ ನೀಡಿದ್ದಾರೆ. ಹೀಗೆ ಸೂರ್ಯಕುಮಾರ್ ಯಾದವ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೈಬಿಟ್ಟ ನಂತರ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತು. ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡ ಸೇರಿದ ನಂತರ ತಾನು ಎಂತಹ ಪ್ರತಿಭಾವಂತ ಆಟಗಾರ ಎಂಬುದನ್ನು ನಿರೂಪಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications