14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ಶುಕ್ರವಾರದಂದು (ಏಪ್ರಿಲ್ 9) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಈ ಪಂದ್ಯಕ್ಕೂ ಮುನ್ನ ಮಾತನಾಡಿದ ವಿರಾಟ್ ಕೊಹ್ಲಿ ಈ ಮೂವರು ಯುವ ಕ್ರಿಕೆಟಿಗರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಸಾಮರ್ಥ್ಯವನ್ನು ಹೆಚ್ಚಿಸಲಿದ್ದಾರೆ ಎಂದು ಹೊಗಳಿದ್ದಾರೆ.
ಪ್ರತಿ ಬಾರಿಯೂ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಐಪಿಎಲ್ ಆರಂಭಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯೂ ಸಹ ಕಪ್ ಗೆಲ್ಲಲೇಬೇಕೆಂಬ ಗುರಿಯೊಂದಿಗೆ ತಯಾರಿ ನಡೆಸುತ್ತಿದೆ. ಕಳೆದ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಮೂವರು ಆಟಗಾರರು ತುಂಬಾ ಎತ್ತರಕ್ಕೆ ಬೆಳೆದಿದ್ದು ಬೆಂಗಳೂರು ತಂಡ ಮತ್ತಷ್ಟು ಬಲಿಷ್ಠಗೊಂಡಿದೆ ಎಂದು ವಿರಾಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಯುವ ಆಟಗಾರರಾದ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಮತ್ತು ವಾಷಿಂಗ್ಟನ್ ಸುಂದರ್ ಅವರು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಒಳ್ಳೆಯ ಅನುಭವವನ್ನು ಹೊಂದಿದ್ದು ದೊಡ್ಡ ವಿಶ್ವಾಸದೊಂದಿಗೆ ಮತ್ತೆ ಆರ್ಸಿಬಿಗೆ ಮರಳಿದ್ದಾರೆ ಎಂದು ತಿಳಿಸಿದ ವಿರಾಟ್ ಈ ಬಾರಿ ಈ ಮೂವರು ಯುವ ಆಟಗಾರರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಸಾಮರ್ಥ್ಯವನ್ನು ಹೆಚ್ಚಿಸಲಿದ್ದಾರೆ ಎಂದು ವಿರಾಟ್ ವಿಶ್ವಾಸ ವ್ಯಕ್ತಪಡಿಸಿದರು.