ಆಡಿದ್ದು ಸಾಕು, ಮೊದಲು ಸ್ಟೇಡಿಯಂನಿಂದ ಆಚೆ ನಡೆಯಪ್ಪ: ಆರ್ಸಿಬಿ ಸ್ಟಾರ್ ಪ್ಲೇಯರ್ ವಿರುದ್ಧ ಫ್ಯಾನ್ಸ್ ಕಿಡಿ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಪಯಣವನ್ನು ಮುಗಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
ಹೌದು, ಇಂದು ( ಮೇ 27 ) ಅಹಮದಾಬಾದಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪ್ರತಿಷ್ಟಿತ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ 14 ಆವೃತ್ತಿಗಳಂತೆ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿಯೂ ಟ್ರೋಫಿ ಇಲ್ಲದೇ ಬರಿಗೈನಲ್ಲಿ ಟೂರ್ನಿಯಿಂದ ಹೊರಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 158 ರನ್ಗಳ ಗುರಿಯನ್ನು ನೀಡಿತು. ರಾಜಸ್ಥಾನ್ ರಾಯಲ್ಸ್ ತಂಡದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಉತ್ತಮ ಬೌಲಿಂಗ್ ಮಾಡಿ ಈ ಮೊತ್ತವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಹಲವಾರು ಅಭಿಮಾನಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಗಳ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ ಅಭಿಮಾನಿಗಳ ಈ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲನ್ನು ಅನುಭವಿಸಿ ನಿರಾಸೆಯನ್ನು ಉಂಟುಮಾಡಿದೆ.
ರಾಜಸ್ಥಾನ್ ರಾಯಲ್ಸ್ 18.1 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿ ಭರ್ಜರಿ ಜಯವನ್ನು ದಾಖಲಿಸಿ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಂಡಿತು. ಇತ್ತ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವಲ್ಲಿ ವಿಫಲರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಪಂದ್ಯದಲ್ಲಿ ದುಬಾರಿಯಾದ ಮೊಹಮ್ಮದ್ ಸಿರಾಜ್ ವಿರುದ್ಧ ವಿಶೇಷವಾಗಿ ಅಭಿಮಾನಿಗಳು ಈ ಕೆಳಕಂಡಂತೆ ಕಿಡಿಕಾರಿದ್ದಾರೆ.

ಸ್ಟೇಡಿಯಂನಿಂದ ಹೊರ ನಡೆ ಎಂದ ಅಭಿಮಾನಿ
ಪಂದ್ಯದಲ್ಲಿ 2 ಓವರ್ ಬೌಲಿಂಗ್ ಮಾಡಿ 31 ರನ್ ಬಿಟ್ಟುಕೊಟ್ಟು ಯಾವುದೇ ವಿಕೆಟ್ ಪಡೆಯದೇ ನಿರಾಸೆ ಉಂಟು ಮಾಡಿದ ಮೊಹಮ್ಮದ್ ಸಿರಾಜ್ ವಿರುದ್ಧ ಕಿಡಿಕಾರಿರುವ ಅಭಿಮಾನಿಯೋರ್ವ ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೌಲಿಂಗ್, ಬ್ಯಾಟಿಂಗ್ ಅಥವಾ ಫೀಲ್ಡಿಂಗ್ ಯಾವುದರಲ್ಲಿಯೂ ಕೂಡ ಉಪಯೋಗಕ್ಕೆ ಬರುವುದಿಲ್ಲ. ಹೀಗಾಗಿ ಸಿರಾಜ್ ದಯವಿಟ್ಟು ಸ್ಟೇಡಿಯಂ ಬಿಟ್ಟು ಹೊರ ನಡೆಯಬೇಕು ಎಂದು ಬೇಡಿಕೆ ಇಟ್ಟು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತ ಪಡಿಸಿದ್ದಾರೆ.

ಈ ಇಬ್ಬರನ್ನು ಮುಂದಿನ ವರ್ಷ ಕೈಬಿಡಿ
ಮತ್ತೋರ್ವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಇಬ್ಬರೂ ಸಹ ಅತೀ ಕೆಟ್ಟ ಆಟಗಾರರು. ಈ ಇಬ್ಬರನ್ನೂ ಮುಂದಿನ ವರ್ಷ ತಂಡದಿಂದ ಕೈಬಿಡಿ ಎಂದು ಮನವಿ ಮಾಡುವುದರ ಮೂಲಕ ತಮ್ಮ ಆಕ್ರೋಶವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

ಸಿರಾಜ್ ರಾಜಸ್ಥಾನ್ ರಾಯಲ್ಸ್ ತಂಡದ ಪಂದ್ಯ ಶ್ರೇಷ್ಠ ಆಟಗಾರ
ಇನ್ನು ಈ ಪಂದ್ಯದ ಪವರ್ ಪ್ಲೇನಲ್ಲಿ 2 ಓವರ್ ಬೌಲಿಂಗ್ ಮಾಡಿ ಕಳಪೆ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮತ್ತೊರ್ವ ನೆಟ್ಟಿಗ ಹೆಚ್ಚು ರನ್ ಬಿಟ್ಟುಕೊಡುವುದರ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ ಮೊಹಮ್ಮದ್ ಸಿರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಲ್ಲಬೇಕು ಎಂದು ಟ್ವೀಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications