
ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವಕ್ಕೆ ಕೇಳಿಬಂತು ಕನ್ನಡಿಗನ ಹೆಸರು
ಈ ಹಿಂದೆ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಕನ್ನಡಿಗ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಲಿದ್ದಾರೆ ಎಂಬ ಸುದ್ದಿ ತಿಳಿದ ಕನ್ನಡಿಗರು ಖುಷಿಪಟ್ಟಿದ್ದರು. ಆದರೆ ಕೆಎಲ್ ರಾಹುಲ್ ಹೊಸದಾಗಿ ಘೋಷಣೆಯಾಗಿರುವ ಲಕ್ನೋ ಫ್ರಾಂಚೈಸಿ ನಾಯಕನಾಗಲಿದ್ದು, ಅಭಿಮಾನಿಗಳಲ್ಲಿ ಇದ್ದ ನಂಬಿಕೆ ಹುಸಿಯಾಯಿತು. ಆದರೆ ಇದೀಗ ಅದೇ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗನ ಹೆಸರು ಕೇಳಿಬರುತ್ತಿದ್ದು ಮನೀಷ್ ಪಾಂಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ನಾಯಕನಾಗುವುದು ಖಚಿತ ಎನ್ನಲಾಗುತ್ತಿದೆ. ಮುಂಬರಲಿರುವ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮನೀಷ್ ಪಾಂಡೆ ಅವರನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲಿದೆ.

ಮನೀಷ್ ಪಾಂಡೆಗಿದೆ ನಾಯಕತ್ವದ ಉತ್ತಮ ಅನುಭವ
ಇನ್ನು ಮನೀಷ್ ಪಾಂಡೆ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕರ್ನಾಟಕ ತಂಡವನ್ನು ರಣಜಿ ಟ್ರೋಫಿ ಮತ್ತು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗಳಲ್ಲಿ ನಾಯಕನಾಗಿ ಮುನ್ನಡೆಸಿರುವ ಅನುಭವ ಹೊಂದಿರುವ ಮನೀಷ್ ಪಾಂಡೆ ಟಿ ಟ್ವೆಂಟಿ ಕ್ರಿಕೆಟ್ ನಾಯಕತ್ವವನ್ನು ಜಾಣ್ಮೆಯಿಂದ ನಿರ್ವಹಿಸುವಷ್ಟು ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಮನೀಷ್ ಪಾಂಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾರಥ್ಯ ವಹಿಸಿಕೊಳ್ಳಲು ಸರಿಯಾದ ಅಭ್ಯರ್ಥಿ ಎಂದರೆ ತಪ್ಪಾಗಲಾರದು.

ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು ಮನೀಷ್ ಪಾಂಡೆ
ಇನ್ನು ಮನೀಷ್ ಪಾಂಡೆ 2009ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಐಪಿಎಲ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಇನ್ನು ಚೊಚ್ಚಲ ಐಪಿಎಲ್ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿರುವ ಮನೀಷ್ ಪಾಂಡೆ ಕೋಲ್ಕತಾ ನೈಟ್ ರೈಡರ್ಸ್, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಪರ ಆಡಿರುವ ಅನುಭವವನ್ನು ಹೊಂದಿದ್ದಾರೆ.


Click it and Unblock the Notifications












