
ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ಪ್ರಪಂಚದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಟೂರ್ನಮೆಂಟ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆ. ಹೌದು, ಇದೇ ಫೆಬ್ರವರಿ 12 ಹಾಗೂ 13ರಂದು ಬೆಂಗಳೂರಿನಲ್ಲಿ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಈ ಮೆಗಾ ಹರಾಜಿಗೆ ವಿಶ್ವದ ಹಲವಾರು ದೇಶಗಳ 1214 ಕ್ರಿಕೆಟಿಗರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಹೀಗೆ ನೋಂದಾಯಿಸಿಕೊಂಡಿದ್ದ ಆಟಗಾರರ ಪೈಕಿ ಒಟ್ಟು 590 ಆಟಗಾರರನ್ನು ಅಂತಿಮವಾಗಿ ಬಿಸಿಸಿಐ ಆಯ್ಕೆ ಮಾಡಿದೆ.
ಇನ್ನು ಈ ಬಾರಿಯ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಈ ನಾಲ್ವರು ಆಟಗಾರರನ್ನು ರಿಟೇನ್ ಮಾಡಿಕೊಳ್ಳುವುದರ ಮೂಲಕ ಉಳಿದ ಆಟಗಾರರನ್ನು ತಂಡದಿಂದ ಕೈಬಿಟ್ಟಿತ್ತು. ಈ ಮೂಲಕ 2018ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಅಂಬಾಟಿ ರಾಯುಡು ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಬಿದ್ದು ಇದೀಗ ಮೆಗಾ ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ವಿಶೇಷವೆಂದರೆ ಅಂಬಾಟಿ ರಾಯುಡು ಈ ಬಾರಿಯ ಮೆಗಾ ಹರಾಜಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂದು ಹೆಸರನ್ನು ನೋಂದಾಯಿಸಿಕೊಂಡು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಹೀಗೆ ಮೆಗಾ ಹರಾಜಿಗೆ ತನ್ನ ಹೆಸರನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂದು ನೋಂದಾಯಿಸಿಕೊಂಡಿರುವ ಅಂಬಾಟಿ ರಾಯುಡು 2 ಕೋಟಿ ಮೂಲಬೆಲೆಯನ್ನು ನಿಗದಿಪಡಿಸಿದ್ದಾರೆ. ಇನ್ನು 36 ವಯಸ್ಸಿನ ಅಂಬಾಟಿ ರಾಯುಡು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಈಗಾಗಲೇ ನಿವೃತ್ತಿಯನ್ನು ಕೊಟ್ಟಿದ್ದು, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮತ್ತೆ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲು ಇಚ್ಛೆ ಪಟ್ಟಿದ್ದಾರೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾಗ ಎಂಎಸ್ ಧೋನಿ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಆಗಿ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಂಬಾಟಿ ರಾಯುಡು ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿದ್ದಾಗ ತಂಡದ ಪ್ರಮುಖ ವಿಕೆಟ್ ಕೀಪರ್ ಆಗಿದ್ದರು. ಹಾಗೂ ಆಂಧ್ರಪ್ರದೇಶ ತಂಡದ ಪರ ಹಲವಾರು ದೇಸಿ ಕ್ರಿಕೆಟ್ ಟೂರ್ನಿಗಳು ಹಾಗೂ ಸರಣಿಗಳಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ದೊಡ್ಡ ಅನುಭವವನ್ನು ಅಂಬಾಟಿ ರಾಯುಡು ಹೊಂದಿದ್ದಾರೆ.
ಇನ್ನು ಅಂಬಾಟಿ ರಾಯುಡು ಅವರನ್ನು ಖರೀದಿಸಲು ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಒಂದೆರಡು ತಂಡಗಳು ಬಿಡ್ ಮಾಡುವ ನಿರೀಕ್ಷೆಯಿದ್ದು, ಯಾವ ತಂಡ ತೆಕ್ಕೆಗೆ ಹಾಕಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೆ 2 ಕೋಟಿ ಮುಖಬೆಲೆಯೊಂದಿಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿರುವ ಭಾರತದ 17 ಆಟಗಾರರ ಪಟ್ಟಿ ಇಲ್ಲಿದೆ: ರವಿಚಂದ್ರನ್ ಅಶ್ವಿನ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಶಮಿ, ದೇವದತ್ ಪಡಿಕ್ಕಲ್, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಕೃನಾಲ್ ಪಾಂಡ್ಯ, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್, ಇಶಾನ್ ಕಿಶನ್, ಅಂಬಟಿ ರಾಯುಡು, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಯುಜ್ವೇಂದ್ರ ಚಹಾಲ್