
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದು ಸದ್ಯ ಎಲ್ಲರ ಚಿತ್ತ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯತ್ತ ಇದೆ. ಇದರ ನಡುವೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರನ್ನು ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೇ ಉಳಿಸಿಕೊಳ್ಳುತ್ತಾ ಅಥವಾ ಕೈಬಿಡುತ್ತಾ ಎಂಬುದರ ಕುರಿತು ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗಳು ಆರಂಭವಾಗಿವೆ.
2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ನಾನು ಭಾಗವಹಿಸಲಿದ್ದೇನೆ ಎಂಬ ದೃಢವಾದ ಹೇಳಿಕೆಯನ್ನು ಎಂಎಸ್ ಧೋನಿ ನೀಡಿದ್ದರು. ಆದರೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ನಂತರ ಎಂಎಸ್ ಧೋನಿ ಮುಂಬರಲಿರುವ ಐಪಿಎಲ್ ಟೂರ್ನಿಯ ಕುರಿತು ಈ ರೀತಿಯ ಯಾವುದೇ ದೃಢವಾದ ಹೇಳಿಕೆಗಳನ್ನು ನೀಡಿಲ್ಲ.
ಕಾರಣ ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಗೆ 2 ನೂತನ ಫ್ರಾಂಚೈಸಿಗಳ ಸೇರ್ಪಡೆಯಾಗುತ್ತಿದೆ. ಹೀಗಾಗಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು, ಎಷ್ಟು ಸ್ವದೇಶಿ ಆಟಗಾರರನ್ನು ಉಳಿಸಿಕೊಳ್ಳಬಹುದು ಮತ್ತು ಎಷ್ಟು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಬಹುದು ಎನ್ನುವುದರ ಕುರಿತಾದ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ. ಹೀಗಾಗಿಯೇ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೇ ಉಳಿಯುವುದರ ಕುರಿತು ಸ್ಪಷ್ಟವಾದ ಹೇಳಿಕೆಗಳನ್ನು ನೀಡಿಲ್ಲ.
ಇನ್ನು ಇತ್ತೀಚೆಗಷ್ಟೇ ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಮೊದಲನೆಯವರಾಗಿರುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದೀಗ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು 'ಎಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬ ನಿಯಮದ ಬಗ್ಗೆ ಇನ್ನೂ ಯಾವುದೇ ರೀತಿಯ ಮಾಹಿತಿ ಸಿಕ್ಕಿಲ್ಲ, ಇದರ ಕುರಿತು ಮುಂದಿನ ದಿನಗಳಲ್ಲಿ ಸ್ಪಷ್ಟ ಮಾಹಿತಿ ಸಿಕ್ಕ ನಂತರವೇ ಯಾವ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ' ಎಂದು ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬುದನ್ನು ನಿರ್ಧರಿಸುವುದಕ್ಕೆ ಇನ್ನೂ ಸಾಕಷ್ಟು ಸಮಯವಿದೆ ಎಂಬುದನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬಳಿಕ ಮುಗಿದ ಬಳಿಕ ಮಾತನಾಡಿದ್ದ ಎಂ ಎಸ್ ಧೋನಿ 'ಮುಂಬರಲಿರುವ ಐಪಿಎಲ್ ಟೂರ್ನಿಗೆ ಆಟಗಾರರನ್ನು ಉಳಿಸಿಕೊಳ್ಳುವ ಕುರಿತಾಗಿ ಬಿಸಿಸಿಐ ಯಾವ ರೀತಿಯ ನಿಯಮವನ್ನು ಜಾರಿಗೆ ತರುತ್ತದೆ ಎಂಬುದು ಹೊರಬಿದ್ದ ನಂತರವಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಯಾವುದು ಉತ್ತಮ ಆಯ್ಕೆಯೋ ಅದನ್ನು ಆರಿಸಲಾಗುತ್ತದೆ. ನನ್ನನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಉಳಿಸಿಕೊಳ್ಳುತ್ತಾ ಅಥವಾ ಇಲ್ಲವೋ ಎಂಬುದಕ್ಕಿಂತ ತಂಡಕ್ಕೆ ಮುಂದಿನ ಹತ್ತು ವರ್ಷಗಳ ಕಾಲ ಯಾವ ಆಟಗಾರರಿಂದ ಉಪಯೋಗವಿದೆಯೋ ಅಂತವರ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತದೆ' ಎಂದು ತಿಳಿಸಿದ್ದರು.