ಲಕ್ನೋ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೆ ಆರ್ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ; ನಂಬಿಕಸ್ಥ ಆಟಗಾರ ಔಟ್!

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಆರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡ ನಂತರ ಇದೀಗ ಪ್ಲೇ ಆಫ್ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಇನ್ನು ಮಂಗಳವಾರ ನಡೆದ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಭರ್ಜರಿ ಜಯ ಸಾಧಿಸಿದ್ದು ನೇರವಾಗಿ ಫೈನಲ್ ಪ್ರವೇಶಿಸಿದೆ. ಇತ್ತ ಈ ಪಂದ್ಯದಲ್ಲಿ ಸೋಲುಂಡ ರಾಜಸ್ಥಾನ್ ರಾಯಲ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಂಡಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಜಯ ಸಾಧಿಸಿ ಬರುವ ತಂಡದ ಜೊತೆ ಕಣಕ್ಕಿಳಿಯಲಿದೆ.
ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಣಕ್ಕಿಳಿಯುತ್ತಿದ್ದು, ಪಂದ್ಯ ಇಂದು ( ಮೇ 25 ) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದೆ. ಇನ್ನು ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಎರಡನೇ ಕ್ವಾಲಿಫೈಯರ್ ಸುತ್ತಿಗೆ ಪ್ರವೇಶ ಪಡೆದುಕೊಳ್ಳಲಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಫೈನಲ್ ಪ್ರವೇಶಕ್ಕಾಗಿ ಸೆಣಸಾಟ ನಡೆಸಲಿದ್ದರೆ, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
ಹೀಗಾಗಿ ಈ ಪಂದ್ಯದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎರಡೂ ತಂಡಗಳು ಕೂಡ ಹೆಚ್ಚಿನ ನಿಗಾ ವಹಿಸಿದ್ದು, ಗೆಲುವು ಸಾಧಿಸಿ ಮುಂದಿನ ಪಂದ್ಯದ ಅರ್ಹತೆ ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಟ್ಟಿವೆ. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಎರಡೂ ತಂಡಗಳು ಸಹ ಬಲಿಷ್ಠ ಆಟಗಾರರನ್ನೊಳಗೊಂಡ ಆಡುವ ಬಳಗವನ್ನು ಕಣಕ್ಕಿಳಿಸುವ ಯೋಚನೆಯಲ್ಲಿದ್ದು ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರಿಗೆ ಅವಕಾಶ ನೀಡಲಾಗುತ್ತದೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಕಳೆದ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿದಿದ್ದ ಆಡುವ ಬಳಗದಲ್ಲಿ ಈ ಬಾರಿ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗದಲ್ಲಿ ಒಂದು ಪ್ರಮುಖ ಬದಲಾವಣೆಯಾಗುವ ಸಾಧ್ಯತೆಯಿದ್ದು ಇದರ ಕುರಿತಾದ ವಿವರ ಈ ಕೆಳಕಂಡಂತಿದೆ.

ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ
ಗುಜರಾತ್ ಟೈಟನ್ಸ್ ವಿರುದ್ಧ ನಡೆದಿದ್ದ ಅಂತಿಮ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟು ಸಿದ್ಧಾರ್ಥ್ ಕೌಲ್ ಅವರಿಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಆ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಸಿದ್ಧಾರ್ಥ್ ಕೌಲ್ 43 ರನ್ ನೀಡಿ ದುಬಾರಿಯಾದರು ಹಾಗೂ ಯಾವುದೇ ವಿಕೆಟ್ ಪಡೆಯದೇ ಮಂಕಾದರು. ಹೀಗಾಗಿ ಸಿದ್ಧಾರ್ಥ್ ಕೌಲ್ ಅವರನ್ನು ಈ ಪಂದ್ಯದಿಂದ ಹೊರಗಿಟ್ಟು ಮತ್ತೆ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ.

ನಂಬಿಕೆ ಇಟ್ಟು ಅವಕಾಶ ನೀಡಿದ್ರು ಫಾಫ್ ಡು ಪ್ಲೆಸಿಸ್
ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಆದ ಬಳಿಕ ಮಾತನಾಡಿದ ಫಾಫ್ ಡು ಪ್ಲೆಸಿಸ್ ಪವರ್ ಪ್ಲೇ ಸಮಯದಲ್ಲಿ ತಂಡಕ್ಕೆ ವಿಕೆಟ್ ಕಬಳಿಸಿ ಕೊಡುವಂತಹ ಬೌಲರ್ ಅಗತ್ಯತೆ ಇತ್ತು ಹೀಗಾಗಿ ಸಿದ್ಧಾರ್ಥ್ ಕೌಲ್ ಅವರನ್ನು ಆಡುವ ಬಳಗಕ್ಕೆ ಕರೆತರಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಆದರೆ ಫಾಫ್ ಡು ಪ್ಲೆಸಿಸ್ ಅವರ ಈ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲರಾದ ಸಿದ್ಧಾರ್ಥ್ ಕೌಲ್ ಆ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯದೇ ನಿರಾಸೆ ಮೂಡಿಸಿದರು.

ಲಕ್ನೋ ವಿರುದ್ಧದ ಲೀಗ್ ಪಂದ್ಯದಲ್ಲಿ ಚೆನ್ನಾಗಿ ಆಡಿದ್ದ ಸಿರಾಜ್
ಇನ್ನು ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆದಿದ್ದ ಲೀಗ್ ಹಂತದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 31 ರನ್ ನೀಡಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಕಳೆದ ಪಂದ್ಯದಲ್ಲಿ ಸಿಕ್ಕಾಪಟ್ಟೆ ದುಬಾರಿಯಾದ ಸಿದ್ಧಾರ್ಥ್ ಕೌಲ್ ಬದಲು ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications