
ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ತಂಡಗಳು ಸೆಣಸಾಟ ನಡೆಸುತ್ತಿವೆ. ಇನ್ನು 5 ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ತನ್ನ ಮೊದಲ 3 ಪಂದ್ಯಗಳಲ್ಲಿ ಸೋತು ಇದೀಗ ನಾಲ್ಕನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿದೆ. ಇತ್ತ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಲಾ 26 ರನ್ ಗಳಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ 8 ರನ್ ಗಳಿಸಿ ಔಟ್ ಆದರೆ, ನಂತರ ಕಣಕ್ಕಿಳಿದ ತಿಲಕ್ ವರ್ಮಾ ಮತ್ತು ಕೀರನ್ ಪೊಲಾರ್ಡ್ ಶೂನ್ಯ ಸುತ್ತಿ ನೆಲಕಚ್ಚಿದರು ಹಾಗೂ ರಮಣ್ ದೀಪ್ ಸಿಂಗ್ 6 ರನ್ ಗಳಿಸಿ ಔಟ್ ಆದರು. ಹೀಗೆ ಒಂದೆಡೆ ತಂಡದ ಪ್ರಮುಖ ಆಟಗಾರರು ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರುತ್ತಿದ್ದರೆ, ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಒತ್ತಡದ ನಡುವೆಯೂ ಅಬ್ಬರಿಸಿದರು. ಏಳನೇ ವಿಕೆಟ್ಗೆ ಸೂರ್ಯಕುಮಾರ್ ಯಾದವ್ ಜತೆ ಕೈಜೋಡಿಸಿದ ಜಯದೇವ್ ಉನಾದ್ಕತ್ ಆ ಸಮಯಕ್ಕೆ ಅಗತ್ಯವಿದ್ದ ಅತ್ಯಮೂಲ್ಯ ಬೆಂಬಲವನ್ನು ನೀಡಿದರು. ಈ ಜೋಡಿ 72 ರನ್ಗಳ ಅಮೂಲ್ಯವಾದ ಜತೆಯಾಟವನ್ನು ಆಡಿತು.
ಜಯದೇವ್ ಉನಾದ್ಕತ್ ಅಜೇಯ 13 ರನ್ ಕಲೆಹಾಕಿದರೆ, ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿ ಆರಂಭದಲ್ಲಿ ಮಿಂಚಿದ ರಾಯಲ್ ಚಾಲೆಂಜರ್ಸ್ ಬೌಲರ್ಗಳ ಪಾಲಿಗೆ ಕಂಟಕವಾದರು. ಈ ಮೂಲಕ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿದ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 152 ರನ್ಗಳ ಗುರಿಯನ್ನು ನೀಡಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವನಿಂದು ಹಸರಂಗ ಮತ್ತು ಹರ್ಷಲ್ ಪಟೇಲ್ ತಲಾ 2 ವಿಕೆಟ್ ಪಡೆದರೆ ಆಕಾಶ್ ದೀಪ್ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.