
ನಿನ್ನೆ ( ಮೇ 29 ) ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ಗಳ ರೋಚಕ ಜಯ ಸಾಧಿಸುವುದರ ಮೂಲಕ ಐದನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಭಾನುವಾರವೇ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದ ಕಾರಣ ನಿನ್ನೆಯ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿತ್ತು. ಆದರೆ ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡು ಎರಡನೇ ಇನ್ನಿಂಗ್ಸ್ ಆರಂಭಗೊಳ್ಳುತ್ತಿದ್ದಂತೆ ಮತ್ತೆ ಮಳೆ ಸುರಿಯಲಾರಂಭಿಸಿತು. ಮಳೆಯ ಹೊಡೆತಕ್ಕೆ ಪಂದ್ಯ ಐದು ಓವರ್ ಕಡಿತಗೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್ಗಳ ಕಠಿಣ ಗುರಿಯನ್ನು ನೀಡಿತ್ತು.
ಮಳೆಯ ಕಾರಣದಿಂದಾಗಿ 15 ಓವರ್ಗಳಿಗೆ ಪಂದ್ಯ ಕುಸಿದ ಕಾರಣ ಚೆನ್ನೈ ಸೂಪರ್ ಕಿಂಗ್ಸ್ 15 ಓವರ್ಗಳಲ್ಲಿ 171 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 15 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ 5 ವಿಕೆಟ್ಗಳ ಗೆಲುವನ್ನು ಕಂಡಿತು.
ಹೀಗೆ ಮುಂಬೈ ಇಂಡಿಯನ್ಸ್ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆದ ತಂಡ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ದಾಖಲೆ ಮಾಡಿದ್ದು, ಅನೇಕರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಕೋರಿದ್ದಾರೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೋಚ್ ಆಗಿ ಕೆಲಸ ಮಾಡಿದ್ದ ಗೌತಮ್ ಗಂಭೀರ್ ಸಹ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಕೋರಿದ್ದಾರೆ.
ಗೌತಮ್ ಗಂಭೀರ್ "ಕಂಗ್ರಾಜುಲೇಷನ್ಸ್ ಚೆನ್ನೈ ಸೂಪರ್ ಕಿಂಗ್ಸ್. ಒಂದು ಟ್ರೋಫಿ ಗೆಲ್ಲುವುದೇ ಕಷ್ಟ. ಅಂತದ್ದರಲ್ಲಿ ಐದು ಟ್ರೋಫಿ ಗೆಲ್ಲುವುದು ನಂಬಲಸಾಧ್ಯವಾದದ್ದು" ಎಂದು ಬರೆದುಕೊಂಡಿದ್ದಾರೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಕೋರಿರುವ ಗಂಭೀರ್ ನೇರವಾಗಿ ಐದು ಕಪ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ಗೆ ವಿಶ್ ಮಾಡುವುದನ್ನು ಬಿಟ್ಟು ಒಂದು ಕಪ್ ಗೆಲ್ಲುವುದೇ ಕಷ್ಟ ಎಂದು ಉಲ್ಲೇಖಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಟ್ರೋಲ್ ಮಾಡಿದ್ದಾರೆ ಎಂಬುದು ಸುಲಭವಾಗಿ ತಿಳಿದುಬರುತ್ತದೆ.
ಸದ್ಯ ಗಂಭೀರ್ ಅವರ ಈ ಟ್ವೀಟ್ ವೈರಲ್ ಆಗುತ್ತಿದ್ದು, ಯಥಾವತ್ತಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಈ ಹಿಂದೆ ಧೋನಿ ಎಂದರೆ ಕಿಡಿಕಾರುತ್ತಿದ್ದ ಗಂಭೀರ್ ಈಗ ಕೊಹ್ಲಿ ತಂಡವನ್ನು ಟ್ರೋಲ್ ಮಾಡುವ ಸಲುವಾಗಿ ಧೋನಿ ತಂಡದ ಪರ ಬ್ಯಾಟ್ ಬೀಸುತ್ತಿದ್ದಾರೆ ಎಂದೆಲ್ಲಾ ಕಾಲೆಳೆಯುತ್ತಿದ್ದಾರೆ.