
ಇಂದು ( ಮೇ 20 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯ ಜರುಗುತ್ತಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಫೀಲ್ಡಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿದ್ದು, ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 177 ರನ್ಗಳ ಗುರಿಯನ್ನು ನೀಡಿದೆ.
ಇನ್ನು ಈ ಗುರಿಯನ್ನು ಕೇವಲ 8.5 ಓವರ್ ಒಳಗೆ ಕೊಲ್ಕತ್ತಾ ನೈಟ್ ರೈಡರ್ಸ್ ಚೇಸ್ ಮಾಡಿದರೆ ಅಂಕಪಟ್ಟಿಯಲ್ಲಿ 14 ಅಂಕಗಳನ್ನು ಪಡೆದುಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಲಿದೆ. ಈ ಮೂಲಕ ನಾಲ್ಕನೇ ಸ್ಥಾನಕ್ಕೆ ಏರಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲಿದೆ.
ಅಂದರೆ ಕೇವಲ 53 ಎಸೆತಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 177 ರನ್ಗಳನ್ನು ಚೇಸ್ ಮಾಡಬೇಕಿದ್ದು, ಇದು ಅಸಾಧ್ಯವೆಂದೇ ಹೇಳಬಹುದಾಗಿದೆ. ಅಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಧಿಸಿದ 112 ರನ್ಗಳ ಬೃಹತ್ ಜಯ ಅಂಕಪಟ್ಟಿಯಲ್ಲಿ ನೆಟ್ ರನ್ ರೇಟ್ನ ಸಹಾಯದಿಂದ ಇತರೆ ಪೈಪೋಟಿಯ ತಂಡಗಳಿಗಿಂತ ಎತ್ತರದಲ್ಲಿ ನಿಲ್ಲುವಂತೆ ಮಾಡಿದೆ.
ಇನ್ನು ಅತ್ತ ಲಕ್ನೋ ಸೂಪರ್ ಜೈಂಟ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 97 ರನ್ಗಳ ಅಂತರದಲ್ಲಿ ಜಯ ಸಾಧಿಸಿದರೆ ಚೆನ್ನೈ ಸೂಪರ್ ಜೈಂಟ್ಸ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಳ್ಳಲಿದೆ. ಹೀಗಾಗಿ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕಣಕ್ಕಿಳಿಯಬೇಕೆಂದರೆ ಲಕ್ನೋ ಸೂಪರ್ ಜೈಂಟ್ಸ್ 97 ರನ್ಗಳ ಅಂತರದಲ್ಲಿ ಗೆಲ್ಲಲೇಬೇಕಿದೆ.
ಆದರೆ ಇದೂ ಸಹ ಕಷ್ಟದ್ದಾಗಿದ್ದು, ಲಕ್ನೋ ಸೂಪರ್ ಜೈಂಟ್ಸ್ ಗೆಲ್ಲುವತ್ತ ಗಮನ ಹರಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಖಚಿತಪಡಿಸಿಕೊಳ್ಳುವುದ ಉತ್ತಮ ಎನ್ನಬಹುದು.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗ ಈ ಕೆಳಕಂಡಂತಿದೆ..
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕರಣ್ ಶರ್ಮಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಆಯುಷ್ ಬಡೋನಿ, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್