ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿ ಮೈದಾನ ತೊರೆದಿದ್ದ ವಿಚಾರ ತಿಳಿದೇ ಇದೆ. ಬಳಿಕ ರಾಹುಲ್ ಬ್ಯಾಟಿಂಗ್ನಲ್ಲಿಯೂ ಕೊನೆಯ ಆಟಗಾರನಾಗಿ ಕಣಕ್ಕಿಳಿದಾರಾದರೂ ಸ್ಕೋರ್ಗಾಗಿ ಓಡುವ ಸ್ಥಿತಿಯಲ್ಲಿ ರಾಹುಲ್ ಇರಲಿಲ್ಲ. ಹೀಗಾಗಿ ಕೆಎಲ್ ರಾಹುಲ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ. ಇದೀಗ ಲಭ್ಯವಾಗುತ್ತಿರುವ ಮಾಹಿತಿಯ ಪ್ರಕಾರ ಕೆಎಲ್ ರಾಹುಲ್ ಟೂರ್ನಿಯಲ್ಲಿ ಉಳಿದ ಸಂಪೂರ್ಣ ಪಂದ್ಯಗಳಿಗೆ ರಾಹುಲ್ ಅಲಭ್ಯವಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದರೆ ಕೆಎಲ್ ರಾಹುಲ್ ಮುಂಬೈಗೆ ತೆರಳಿ ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ. ಕೆಎಲ್ ರಾಹುಲ್ ಗಾಯವನ್ನು ಬಿಸಿಸಿಐ ನಿಭಾಯಿಸಲಿದ್ದು ಈವರೆಗೆ ಯಾವುದೇ ಸ್ಕ್ಯಾನಿಂಗ್ ನಡೆಸಲಾಗಿಲ್ ಎಂಬ ಮಾಹಿತಿ ಹೊರಬಿದ್ದಿದೆ.

ಬಿಸಿಸಿಐ ಮೂಲಗಳ ಹೇಳಿಕೆಯನ್ನು ಉಲ್ಲೇಖಿಸಿ 'ದಿ ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ. "ಪ್ರಸ್ತುತ ಕೆಎಲ್ ರಾಹುಲ್ ತಂಡದ ಜೊತೆಗೆ ಲಕ್ನೋದಲ್ಲಿಯೇ ಇದ್ದಾರೆ. ಆದರೆ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯ ವೀಕ್ಷಿಸಿದ ಬಳಿಕ ಗುರುವಾರ ಲಕ್ನೋ ಶಿಬಿರವನ್ನು ತೊರೆಯಲಿದ್ದಾರೆ. ಮುಂಬೈನಲ್ಲಿ ಬಿಸಿಸಿಐ ಸೂಚಿಸಿರುವ ವೈದ್ಯಕೀಯ ಸೌಲಭ್ಯದೊಂದಿಗೆ ಅವರಿಗೆ ಸ್ಕ್ಯಾನಿಂಗ್ ನಡೆಸಲಾಗುತ್ತದೆ" ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಕನ್ನಡಿಗ ಕೆಎಲ್ ರಾಹುಲ್ ಅಲಭ್ಯವಾಗುವುದು ಖಚಿತವಾಗಿದೆ. ಅನುಭವಿ ಆಟಗಾರ ಕೆಎಲ್ ರಾಹುಲ್ ಅವರ ಅಲಭ್ಯತೆಯಲ್ಲಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಮುನ್ನಡೆಸಲಿದ್ದಾರೆ. ಕಳೆದ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿಯೂ ಕೃನಾಲ್ ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದರು.
ಟೂರ್ನಿಯಿಂದ ವೇಗಿ ಉನಾದ್ಕಟ್ ಔಟ್
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಅನುಭವಿ ವೇಗಿ ಜಯ್ದೇವ್ ಉನಾದ್ಕಟ್ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಭುಜದ ನೋವಿಗೆ ತುತ್ತಾಗಿದ್ದು ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆಡಲು ಉನಾದ್ಕಟ್ ಅಸಮರ್ಥರಾಗಿರುವ ಕಾರಣ ಟೂರ್ನಿಯಿಂದ ಹೊರಗುಳಿಯುವಂತಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಆವೃತ್ತಿಯ ಮುಂದಿನ ಪಂದ್ಯಗಳಲ್ಲಿ ಅನುಭವಿ ವೇಗಿಯ ಸೇವೆಯಿಂದ ವಂಚಿತವಾಗಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಮೇ 3 ಬುಧವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.