
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 43ನೇ ಪಂದ್ಯ ಇಂದು ( ಮೇ 1 ) ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹಲವು ಪಂದ್ಯಗಳ ಬಳಿಕ ಗಾಯದಿಂದ ಚೇತರಿಸಿಕೊಂಡಿರುವ ಫಾಫ್ ಡು ಪ್ಲೆಸಿಸ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಆದರೆ ಇದೇ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಾಯಕ್ಕೊಳಗಾಗಿ ಮೈದಾನದಿಂದ ಹೊರನಡೆದಿದ್ದಾರೆ.
ಹೌದು, ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡಿದ್ದು, ಎರಡನೇ ಓವರ್ನ ಅಂತಿಮ ಎಸೆತದಲ್ಲಿ ಬೌಂಡರಿ ರಕ್ಷಣೆಗೆ ತೆರಳಿದ್ದ ಕೆಎಲ್ ರಾಹುಲ್ ಗಾಯಕ್ಕೀಡಾಗಿದ್ದಾರೆ.
ಮಾರ್ಕಸ್ ಸ್ಟಾಯಿನಿಸ್ ಎಸೆದ ಈ ಎಸೆತಕ್ಕೆ ಫಾಫ್ ಡು ಪ್ಲೆಸಿಸ್ ಬೌಂಡರಿ ಬಾರಿಸಿದರು. ಈ ಬೌಂಡರಿಯನ್ನು ಬೌಂಡರಿ ಲೈನ್ ಬಳಿ ತಡೆಯಲು ಯತ್ನಿಸಿದ ಕೆಎಲ್ ರಾಹುಲ್ ಅಲ್ಲಿಯೇ ಕುಸಿದು ಬಿದ್ದರು. ತಕ್ಷಣವೇ ಆಗಮಿಸಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಪರಿಶೀಲಿಸಿ ಕೆಎಲ್ ರಾಹುಲ್ ಅವರನ್ನು ಮೈದಾನದಿಂದ ಪೆವಿಲಿಯನ್ಗೆ ಕರೆದೊಯ್ದಿದ್ದಾರೆ.
ಹೀಗೆ ಕೆಎಲ್ ರಾಹುಲ್ ಹೊರನಡೆದ ಬೆನ್ನಲ್ಲೇ ನಾಯಕತ್ವದ ಜವಾಬ್ದಾರಿಯನ್ನು ಕೃನಾಲ್ ಪಾಂಡ್ಯ ವಹಿಸಿಕೊಂಡಿದ್ದಾರೆ. ಅತ್ತ ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಹೊರನಡೆದದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ನಷ್ಟ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.
ಹೌದು, ಕೆಎಲ್ ರಾಹುಲ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಹೆಚ್ಚು ಎಸೆತಗಳನ್ನು ವ್ಯರ್ಥ ಮಾಡಿ ಕಡಿಮೆ ರನ್ ಗಳಿಸುತ್ತಿದ್ದ ಕಾರಣ ಇಂದಿನ ಪಂದ್ಯದಲ್ಲಿ ಆಡದೇ ಇರುವುದು ಆರ್ಸಿಬಿಗೆ ಹಿನ್ನಡೆ ಉಂಟುಮಾಡಲಿದೆ ಎಂದು ಟ್ರೋಲ್ ಮಾಡಲಾಗುತ್ತಿದೆ.
ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು ಹೀಗಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್ವುಡ್
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಯಶ್ ಠಾಕೂರ್