ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಗಾಯದ ಕಾರಣದಿಂದ ಶಿಖರ್ ಧವನ್ ಅಲಭ್ಯರಾಗಿದ್ದು, ಸ್ಯಾಮ್ ಕರನ್ ತಂಡವನ್ನು ಮುನ್ನಡೆಸಲಿದ್ದಾರೆ.
ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತವರಿನ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನಕ್ಕೇರುವ ಉತ್ಸಾಹದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಇದುವರೆಗೂ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದೆ, ಅದರಲ್ಲೂ ತವರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಅವರು ಗೆಲುವಿನ ಓಟವನ್ನು ಮುಂದುವರೆಸುವ ಉತ್ಸಾಹದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 212 ರನ್ಗಳ ಮೊತ್ತವನ್ನು ಚೇಸ್ ಮಾಡಿದ್ದರು. ಇಂದಿನ ಪಂದ್ಯದಲ್ಲಿ ಅದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ ಕೆಎಲ್ ರಾಹುಲ್ ಪಡೆ.

ಮೊದಲ ಎರಡು ಪಂದ್ಯಗಳಲ್ಲಿ ಸತತ ಗೆಲುವು ಕಂಡ ನಂತರ ಪಂಜಾಬ್ ಕಿಂಗ್ಸ್ ನಂತರ ಎರಡು ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದೆ. ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ದ ಹೀನಾಯ ಸೋಲಿನ ಬಳಿಕ, ಗುಜರಾತ್ ಟೈಟಾನ್ಸ್ ವಿರುದ್ಧ ಕೂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಶಿಖರ್ ಧವನ್ ಹೊರತುಪಡಿಸಿದರೆ ಉಳಿದ ಯಾವೊಬ್ಬ ಬ್ಯಾಟರ್ ಕೂಡ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ತಂಡದಲ್ಲಿ ಪ್ರಮುಖ ಸ್ಪಿನ್ನರ್ ಗಳು ಇರುವುದರಿಂದ ಸೋಲಿನ ಸರಪಳಿಯನ್ನು ಕಳಚುವ ವಿಶ್ವಾಸದಲ್ಲಿದೆ ಶಿಖರ್ ಧವನ್ ಪಡೆ.

ಏಕಾನ ಸ್ಟೇಡಿಯಂ ಸಾಮಾನ್ಯವಾಗಿ ಬೌಲಿಂಗ್ಗೆ ಹೆಚ್ಚಿನ ಸಹಕಾರಿಯಾಗಲಿದೆ. ಕಡಿಮೆ ಬೌನ್ಸ್ ಹೊಂದಿದ್ದು ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಇದೇ ಅಂಗಳದಲ್ಲಿ ಎರಡೂ ಪಂದ್ಯಗಳನ್ನು ಗೆದ್ದಿರುವ ಅವರು ಇಂದಿನ ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿದೆ. ಎರಡೂ ತಂಡಗಳಲ್ಲಿ ಅನುಭವಿ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದ್ದು ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಬಹುದು.
ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬದೋನಿ, ಅವೇಶ್ ಖಾನ್, ಯುಧ್ವೀರ್ ಸಿಂಗ್ ಚರಕ್, ಮಾರ್ಕ್ ವುಡ್, ರವಿ ಬಿಷ್ಣೋಯ್.
ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್ಪ್ರೀತ್ ಸಿಂಗ್ ಭಾಟಿಯಾ, ಸಿಕಂದರ್ ರಜಾ, ಸ್ಯಾಮ್ ಕುರಾನ್ (ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್ದೀಪ್ ಸಿಂಗ್.