ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಈ ನಿಟ್ಟಿನಲ್ಲಿ ಹಲವು ಯುವ ಆಟಗಾರರ ಹೆಸರುಗಳು ಕೇಳಿ ಬರುತ್ತಿವೆ. ಈ ಪಟ್ಟಿಯಲ್ಲಿ ಕೇಳಿ ಬರುತ್ತಿರುವ ಮೊದಲ ಹೆಸರು ರಜತ್ ಪಟಿದಾರ್. ದೇಶೀಯ ಟೂರ್ನಿಯಲ್ಲಿ ಮಧ್ಯ ಪ್ರದೇಶ ಪರ ಅಮೋಘ ಪ್ರದರ್ಶನ ನೀಡುತ್ತಿದ್ದು ಗಮನ ಸೆಳೆದಿದ್ದಾರೆ. ಇವರ ಮುಂದಾಳತ್ವದ ಮಧ್ಯ ಪ್ರದೇಶ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದೆ.
ಬುಧವಾರ ಬೆಂಗಳೂರಿನ ಹೊರ ವಲಯದಲ್ಲಿರುವ ಆಲೂರು ಅಂಗಳದಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮಧ್ಯ ಪ್ರದೇಶ ಇನ್ನು ನಾಲ್ಕು ಎಸೆತಗಳು ಬಾಕಿ ಇರುವಂತೆ ಆರು ವಿಕೆಟ್ ಜಯ ಸಾಧಿಸಿತು. ಈ ಮೂಲಕ ಮಧ್ಯ ಪ್ರದೇಶ ಸೆಮಿಫೈನಲ್ ಪ್ರವೇಶಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದೆ ಸೌರಾಷ್ಟ್ರ ಪರ ಯಾವೊಬ್ಬ ಬ್ಯಾಟರ್ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಚಿರಾಗ್ ಜಾನಿ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 45 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 80 ರನ್ ಸಿಡಿಸಿ ತಂಡಕ್ಕೆ ನೆರವಾದರು.
ಮಧ್ಯ ಪ್ರದೇಶ ಪರ ವೆಂಕಟೇಶ್ ಅಯ್ಯರ್ ಹಾಗೂ ಆವೇಶ್ ಖಾನ್ ತಲಾ ಎರಡು ವಿಕೆಟ್ ಕಬಳಿಸಿದರು.
ಮಧ್ಯ ಪ್ರದೇಶ ತಂಡದ ಪರ ಅರ್ಪಿತ್ ಗೌಡ ಹಾಗೂ ಹರ್ಷ ಗಾವ್ಲಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ತಂಡಕ್ಕೆ 43 ರನ್ಗಳ ಜೊತೆಯಾಟದ ಕಾಣಿಕೆ ನೀಡಿದರು. ಆರಂಭಿಕ ಬ್ಯಾಟರ್ ಅರ್ಪಿತ್ 42 ರನ್ ಸಿಡಿಸಿ ಮಿಂಚಿದರು. ಸುಭ್ರಾಂಶು ಸೇನಾಪತಿ 24 ರನ್ ಸಿಡಿಸಿದರು.
ಮಧ್ಯ ಪ್ರದೇಶ ತಂಡದ ಪರ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 24 ರನ್ ಸಿಡಿಸಿದರು. ಉಳಿದಂತೆ ನಾಯಕ ರಜತ್ ಪಟಿದಾರ್ 18 ಎಸೆತಗಳಲ್ಲಿ 28 ರನ್ ಬಾರಿಸಿದರು. ಹರ್ಷಿತ್ ಸಿಂಗ್ 9 ಎಸೆತಗಳಲ್ಲಿ 22 ರನ್ ಬಾರಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು.
ಆರ್ಸಿಬಿ ಈ ಬಾರಿ ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಕೇವಲ ಮೂರು ಆಟಗಾರರನ್ನು ಉಳಿಸಿಕೊಂಡಿತ್ತು. ಅದರಲ್ಲಿ ಮೊದಲ ಆಯ್ಕೆಯ ಆಟಗಾರನಾಗಿ ವಿರಾಟ್ ಕೊಹ್ಲಿ ಸ್ಥಾನ ಪಡೆದರೆ, ರಜತ್ ಪಟಿದಾರ್ ಮಾಲೀಕರ ಚಿತ್ತ ಕದಿಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಐಪಿಎಲ್ನಲ್ಲಿ ಇವರು ಆರ್ಸಿಬಿ ಪರ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೆ ಇವರ ಹೆಗಲಿಗೆ ನಾಯಕತ್ವದ ಜವಾಬ್ದಾರಿಯನ್ನು ಸಹ ನೀಡಬಹುದಾಗಿದೆ.