ಬೆಂಗಳೂರು ಎಂ ಚಿನ್ನಸ್ವಾಮಿದತ್ತ ಭಾರತದ ಕ್ರೀಡಾಭಿಮಾನಿಗಳ ಚಿತ್ತ ನೆಟ್ಟಿದೆ. 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಆರಂಭವನ್ನು ಮಾಡುವ ಕನಸು ಆರ್ಸಿಬಿ ತಂಡದ್ದಾಗಿದೆ.
ಬ್ಯಾಟಿಂಗ್ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಚಿನ್ನಸ್ವಾಮಿ ಮೈದಾನ, ಬಹು ದಿನಗಳ ಬಳಿಕ ಕ್ರಿಕೆಟ್ಗೆ ವೇದಿಕೆ ಕಲ್ಪಿಸಲಿದೆ. ಕಳೆದ ಬಾರಿ ಆರ್ಸಿಬಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆ ನಡೆದ ಬಳಿಕ ಬೆಂಗಳೂರಿನಲ್ಲಿ ಯಾವುದೇ ಪಂದ್ಯಗಳು ನಡೆದಿರಲಿಲ್ಲ. ಈಗ ಮತ್ತೆ ಕ್ರಿಕೆಟ್ ಕಲರವ ಚಿನ್ನಸ್ವಾಮಿಯಲ್ಲಿ ಕೇಳಲಿದೆ.

ಈಗಾಗಲೇ ಉಭಯ ತಂಡಗಳು ಐಪಿಎಲ್ನಲ್ಲಿ ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಎಸ್ಆರ್ಎಚ್ 14 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ಈ ಬಾರಿ ಆರ್ಸಿಬಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕೆ ಇಳಿಯಲಿದ್ದು, ಆತ್ಮ ವಿಶ್ವಾಸ ಹೆಚ್ಚಿದೆ.
ಆರ್ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್ಗಳ ದಂಡೇ ಇದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಈ ತಂಡದ ಬ್ಯಾಟಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಹಾಗೂ ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ. ಈ ಒಂದು ಸ್ಥಾನದ ಮೇಲೆ ವೆಂಕಟೇಶ್ ಅಯ್ಯರ್, ದೇವದತ್ ಪಡಿಕ್ಕಲ್, ಜಾಕಬ್ ಬೆಥೆಲ್ ಚಿತ್ತ ನೆಟ್ಟಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ತಂಡ ಇವರನ್ನು ಬಳಸಿಕೊಳ್ಳಲಿದೆ.
ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಆಡಲಿದ್ದು, ಆಲ್ರೌಂಡರ್ ಆಗಿ ಟೀಮ್ ಡೇವಿಡ್, ಕೃನಾಲ್ ಪಾಂಡ್ಯ ಸ್ಥಾನ ಪಡೆಯುವುದು ಕನ್ಫರ್ಮ್ ಎಂದು ಹೇಳಲಾಗುತ್ತಿದೆ. ಜೋಶ್ ಹ್ಯಾಜಲ್ವುಡ್ ತಂಡವನ್ನು ಸೇರಿದ್ದಾರೆ. ಆದರೆ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಆರಂಭಿಕ ಪಂದ್ಯಗಳಲ್ಲಿ ಆಡುವುದು ಡೌಟ್.

ಭುವನೇಶ್ವರ್ ಕುಮಾರ್ ವೇಗದ ಬೌಲಿಂಗ್ ನೊಗವನ್ನು ಹೊರಲಿದ್ದಾರೆ. ಇವರೊಂದಿಗೆ ಇನ್ನೊಂದು ತುದಿಯಿಂದ ಯಾರು ಬೌಲಿಂಗ್ ಮಾಡುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಪವರ್ ಪ್ಲೇ ಹಾಗೂ ಡೆತ್ ಓವರ್ಗಳಲ್ಲಿ ತಂಡಕ್ಕೆ ನೆರವಾಗಬಲ್ಲ ಆಟಗಾರನಿಗೆ ತಂಡ ಮಣೆ ಹಾಕಲಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಇಶಾನ್ ಕಿಶನ್ ಮುನ್ನಡೆಸುತ್ತಿದ್ದಾರೆ. ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾದ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಬೌಲಿಂಗ್ ವಿಭಾಗದಲ್ಲೂ ನುರಿತ ಆಟಗಾರರು ಇದ್ದು, ಇವರು ತಂಡದ ಜಯದಲ್ಲಿ ಮಿಂಚಬೇಕಿದೆ.