ಮಳೆ ಬಾಧಿತ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಟಾಪ್ ಆರ್ಡರ್ ಬ್ಯಾಟರ್ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಆರ್ಸಿಬಿ, ರಾಜಸ್ಥಾನ ರಾಯಲ್ಸ್ ತಂಡಕ್ಕೆ 19ನೇ ಆವೃತ್ತಿಯ ಐಪಿಎಲ್ನ 16ನೇ ಪಂದ್ಯದಲ್ಲಿ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ.
ಆರ್ಸಿಬಿ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ತಾವು ಎದುರಿಸಿದ ಇನಿಂಗ್ಸ್ ಮೊದಲ ಓವರ್ನ ಮೊದಲ ಎಸೆತದಲ್ಲಿ ಔಟ್ ಆದರು. ಇವರು ಜೋಫ್ರಾ ಆರ್ಚರ್ ಎಸೆತದಲ್ಲಿ ಧ್ರುವ್ ಜುರೇಲ್ ಅವರಿಗೆ ಕ್ಯಾಚ್ ನೀಡಿದರು. ಎರಡನೇ ವಿಕೆಟ್ಗೆ ಆರಂಭಿಕ ವಿರಾಟ್ ಕೊಹ್ಲಿ ಹಾಗೂ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಜೋಡಿ ಅಬ್ಬರದ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 3 ಓವರ್ಗಳಲ್ಲಿ 45 ರನ್ ಸೇರಿಸಿತು. ಈ ಹಂತದಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ 3 ಬೌಂಡರಿ ನೆರವಿನಿಂದ 18 ರನ್ ಬಾರಿಸಿ ಔಟ್ ಆದರು.

ಬ್ಯಾಟಿಂಗ್ನಲ್ಲಿ ಬಡ್ತಿ ಪಡೆದ ಕೃನಾಲ್ ಪಾಂಡ್ಯ (1) ಸ್ಪಿನ್ ಬೌಲರ್ ರವಿ ಬಿಷ್ಣೋಯಿ ತೋಡಿದ ಖೆಡ್ಡಾಗೆ ಬಲಿಯಾದರು. ವಿಕೆಟ್ ಕೀಪರ್ ಜಿತೇಶ್ ಶರ್ಮಾ (5) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಕಳೆದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಟೀಮ್ ಡೇವಿಡ್ 2 ಬೌಂಡರಿ ಸಹಾಯದಿಂದ 13 ರನ್ ಸಿಡಿಸಿ ಬ್ರಿಜೇಶ್ ಶರ್ಮಾ ತೋಡಿದ ಖೆಡ್ಡಾಗೆ ಬಲಿಯಾದರು. ಕೆಳ ಮಧ್ಯಮ ಕ್ರಮಾಂಕದಲ್ಲಿ ಸ್ಟಾರ್ ಆಲ್ರೌಂಡರ್ ರೊಮಾರಿಯೋ ಶೆಫರ್ಡ್ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 22 ರನ್ ಬಾರಿಸಿ ಔಟ್ ಆದರು.
ನಾಯಕ ರಜತ್ ಪಾಟಿದಾರ್ ಅವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನಡೆಸಿದರು. ಸಂಕಷ್ಟದಲ್ಲಿದ್ದ ತಂಡಕ್ಕೆ ರಜತ್ ಆಧಾರವಾದರು. ಇವರು 40 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 63 ರನ್ ಸಿಡಿಸಿದರು. ಈ ಮೂಲಕ ತಮ್ಮ ಐಪಿಎಲ್ ವೃತ್ತಿ ಜೀವನದ 10ನೇ ಅರ್ಧಶತಕ ಬಾರಿಸಿದರು.
ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಈ ಲೀಗ್ನಲ್ಲಿ ಮೊದಲ ಬಾರಿಗೆ ಆಡುವ ಅವಕಾಶವನ್ನು ಪಡೆದರು. ಇವರು 15 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 29 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಬೆಂಗಳೂರು ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 201 ರನ್ ಸೇರಿಸಿತು.
ರಾಜಸ್ಥಾನ್ ರಾಯಲ್ಸ್ ತಂಡದ ಪರ ಜೋಫ್ರಾ ಆರ್ಚರ್, ರವಿ ಬಿಷ್ಣೋಯಿ, ಬ್ರಿಜೇಶ್ ಶರ್ಮಾ ತಲಾ 2 ವಿಕೆಟ್ ಪಡೆದರು.