ಜೂನ್ 2ರಿಂದ ಜೂನ್ 29ರವರೆಗೆ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯದಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಏಪ್ರಿಲ್ 30ರಂದು ಪ್ರಕಟಿಸಿದೆ.
ಈ ಬಾರಿಯ ಟಿ20 ವಿಶ್ವಕಪ್ಗಾಗಿ ಭಾರತ ಕ್ರಿಕೆಟ್ ತಂಡವು ಕೆಲವು ಅಚ್ಚರಿ ಹೆಸರುಗಳ ಆಯ್ಕೆಯಿಂದ ಹೊರಗಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಅವರಂತಹ ಅಗ್ರ ಆಟಗಾರರು ನಿರೀಕ್ಷಿತವಾಗಿ ಸೇರ್ಪಡೆಗೊಂಡರೆ, ಕೆಲವು ಪ್ರಮುಖ ಆಟಗಾರರನ್ನು ಕೈಬಿಟ್ಟಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಉತ್ತಮ ಫಾರ್ಮ್ನಲ್ಲಿರುವ ಕೆಎಲ್ ರಾಹುಲ್ ಮತ್ತು ರಿಯಾನ್ ಪರಾಗ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇನ್ನು ಫಿನಿಷರ್ ರಿಂಕು ಸಿಂಗ್ ಅವರನ್ನು ಮೀಸಲು ಆಟಗಾರನಾಗಿ ಹಿಂಬಡ್ತಿ ನೀಡಲಾಗಿದೆ.
ಇನ್-ಫಾರ್ಮ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರನ್ನು ನಿರ್ಲಕ್ಷಿಸಲಾಗಿದ್ದರೆ, ಸನ್ರೈಸರ್ಸ್ ಹೈದರಾಬಾದ್ ವೇಗದ ಬೌಲರ್ ಟಿ ನಟರಾಜನ್ ಅವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಆದರೂ ಕಳಪೆ ಪ್ರದರ್ಶನ ನೀಡಿರುವ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಅರ್ಶ್ದೀಪ್ ಸಿಂಗ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

ಭಾರತ ತಂಡದಲ್ಲಿ ಕಾಣೆಯಾದ ಇನ್ನೊಂದು ಪ್ರಮುಖ ಹೆಸರೆಂದರೆ ಸ್ಪಿನ್ನರ್ ರವಿ ಬಿಷ್ಣೋಯಿ. ವಿಶ್ವದ ಟಿ20 ಶ್ರೇಯಾಂಕದಲ್ಲಿ ನಂ.6 ಬೌಲರ್ ಆಗಿರುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಪ್ರಸ್ತುತ ಐಪಿಎಲ್ 2024ರಲ್ಲಿ ಇದುವರೆಗೆ ಆಡಿದ 9 ಪಂದ್ಯಗಳಲ್ಲಿ 5 ವಿಕೆಟ್ಗಳನ್ನು ಪಡೆದಿದ್ದಾರೆ.
ಇದೇ ವೇಳೆ 2007ರ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ಹಾಗೂ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು 2024ರ ಟಿ20 ವಿಶ್ವಕಪ್ ಭಾರತ ತಂಡದಲ್ಲಿ ರವಿ ಬಿಷ್ಣೋಯ್ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.
"ರವಿ ಬಿಷ್ಣೋಯಿ ಐಸಿಸಿ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ 6ನೇ ಸ್ಥಾನದಲ್ಲಿದ್ದಾರೆ, ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಅಲ್ಲ. ಇದು ನುಂಗಲು ಕಠಿಣ ಮಾತ್ರೆ," ಎಂದು ಇರ್ಫಾನ್ ಪಠಾಣ್ ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ತನ್ನ 2024ರ ಟಿ20 ವಿಶ್ವಕಪ್ ಅಭಿಯಾನವನ್ನು ಐರ್ಲೆಂಡ್ ವಿರುದ್ಧ ಜೂನ್ 5ರಂದು ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಾರಂಭಿಸಲಿದೆ.
ಜೂನ್ 9ರಂದು ಅದೇ ಸ್ಥಳದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಹೈ-ವೋಲ್ಟೇಜ್ ಪಂದ್ಯದಲ್ಲಿ ಸೆಣಸಾಡಲಿದೆ. ಆ ಬಳಿಕ ಜೂನ್ 12 ಮತ್ತು 15ರಂದು ಕ್ರಮವಾಗಿ ಯುಎಸ್ಎ ಮತ್ತು ಕೆನಡಾ ತಂಡಗಳನ್ನು ಭಾರತ ಎದುರಿಸಲಿದೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್.
ಮೀಸಲು ಆಟಗಾರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.