ಪ್ರಸ್ತುತ ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ.
ಇದಾದ ಬಳಿಕ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಹಲವು ಮಹತ್ವದ ಬದಲಾವಣೆಗಳಾಗಬಹುದು. ಕೆಲವು ಆಟಗಾರರು ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಲು ಅವಕಾಶಕ್ಕಾಗಿ ಕಾಯುತ್ತದ್ದರೆ, ಇನ್ನುಳಿದ ಸ್ಟಾರ್ ಆಟಗಾರರು ತಂಡಕ್ಕೆ ಮರಳಿ ಸೇರುವ ಕನಸು ಕಾಣುತ್ತಿದ್ದಾರೆ.

ಇತ್ತೀಚೆಗೆ ಮುಕ್ತಾಯವಾದ ದುಲೀಪ್ ಟ್ರೋಫಿ ದೇಶೀಯ ಟೂರ್ನಿಯಲ್ಲಿ ಈ ಆಟಗಾರರು ಅಬ್ಬರಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಆಡುವ ಕನಸು ಕಂಡಿದ್ದಾರೆ. ಆದರೆ, ಇವರಲ್ಲಿ ಇಬ್ಬರು ಆಟಗಾರರು ಟೀಮ್ ಇಂಡಿಯಾಕ್ಕೆ ಮರಳುವ ಸಾಧ್ಯತೆ ಹೆಚ್ಚಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿದೆ.
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಭಾರತ ತಂಡದಲ್ಲಿ ಇಬ್ಬರು ವಿಕೆಟ್ಕೀಪರ್ಗಳು ಸೇರಿಕೊಳ್ಳುವ ಸಾಧ್ಯತೆಯಿದೆ. ವರದಿಗಳ ಪ್ರಕಾರ, ರಿಷಬ್ ಪಂತ್ ಅವರು ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ತಂಡದಿಂದ ಕೈಬಿಡಬಹುದು . ಕೆಲಸದ ಹೊರೆ ನಿರ್ವಹಣೆಯನ್ನು ಕಡಿಮೆ ಮಾಡಲು ಪಂತ್ ಅವರಿಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಬಹುದು. ಇಂತಹ ಪರಿಸ್ಥಿತಿಯಲ್ಲಿ ವಿಕೆಟ್ ಕೀಪರ್- ಬ್ಯಾಟರ್ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಬಹದು. ಮತ್ತೊಂದೆಡೆ ಇಶಾನ್ ಕಿಶನ್ ಎರಡನೇ ವಿಕೆಟ್ ಕೀಪರ್- ಬ್ಯಾಟರ್ ಆಗಿ ತಂಡಕ್ಕೆ ಮರಳಬಹುದು. ಆಗ ಇಶಾನ್ ಅವರನ್ನು ಟೀಮ್ ಇಂಡಿಯಾದ ಆರಂಭಿಕನಾಗಿಯೂ ನೋಡಬಹುದು.
ಬಹಳ ಸಮಯದಿಂದ ಇಶಾನ್ ಕಿಶನ್ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಆದರೆ, ಈ ವರ್ಷ ಬುಚ್ಚಿ ಬಾಬು ಮತ್ತು ದುಲೀಪ್ ಟ್ರೋಫಿ ಟೂರ್ನಿಗಳಲ್ಲಿ ಇಶಾನ್ ಶತಕಗಳನ್ನು ಬಾರಿಸುವ ಮೂಲಕ ಬಿಸಿಸಿಐ ಗಮನ ಸೆಳೆದಿದ್ದಾರೆ. ಇನ್ನೊಂದೆಡೆ ಸಂಜು ಸ್ಯಾಮ್ಸನ್ ದುಲೀಪ್ ಟ್ರೋಫಿಯಲ್ಲಿ ಭಾರತ-ಡಿ ತಂಡದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಭಾರತ-ಎ ವಿರುದ್ಧದ ಪಂದ್ಯದಲ್ಲಿ ಅವರು 45 ಎಸೆತಗಳಲ್ಲಿ 3 ಬೌಂಡಿರಿ ಮತ್ತು ಸಿಕ್ಸರ್ಗಳ ನೆರವಿನಿಂದ 40 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ಇಬ್ಬರೂ ಭಾರತ ತಂಡಕ್ಕಾಗಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದೀಗ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ತಂಡಕ್ಕೆ ವಾಪಸಾಗುವುದರೊಂದಿಗೆ ತಂಡದ ಸಂಯೋಜನೆ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಧ್ರುವ್ ಜುರೆಲ್ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಪಂತ್ ಮತ್ತು ಧ್ರುವ್ ಬದಲಿಗೆ ಸಂಜು ಮತ್ತು ಇಶಾನ್ ತಂಡಕ್ಕೆ ಸೇರಬಹುದು.
ಇದಲ್ಲದೆ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಸ್ಟಾರ್ ಆಟಗಾರರಾದ ರಿಂಕು ಸಿಂಗ್, ಅಭಿಷೇಕ್ ಶರ್ಮಾ, ರವಿ ಬಿಷ್ಣೋಯ್ ಮತ್ತು ಅರ್ಷದೀಪ್ ಸಿಂಗ್ ಅವರು ಕೂಡ ಟೀಮ್ ಇಂಡಿಯಾ ಪರ ಮಿಂಚಲು ತಯಾರಾಗುತ್ತಿದ್ದಾರೆ.