ಕೋಟ್ಯಾಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಜನವರಿ 18-19ರ ನಡುವೆ ಪ್ರಕಟಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ, ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಶಾಕ್ ಎದುರಾಗಿದೆ. ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯಗೊಂಡಿರುವ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಬುಮ್ರಾ ಆಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟೀಕರಣ ಸಿಗುತ್ತಿಲ್ಲ. ಈಗ ಜಸ್ಪ್ರೀತ್ ಬುಮ್ರಾ ಅವರಿಗೆ ವೈದ್ಯರು ಬೆಡ್ ರೆಸ್ಟ್ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಬೆನ್ನಿನ ಊತವನ್ನು ಕಡಿಮೆ ಮಾಡಲು ಮನೆಯಲ್ಲಿ ಬೆಡ್ ರೆಸ್ಟ್ ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಅವರು ಮುಂದಿನ ವಾರ ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್ಗೆ ಹೋಗಬಹುದು. ಆದರೆ ಇದಕ್ಕೆ ಇನ್ನೂ ನಿಗದಿತ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ.

ಜಸ್ಪ್ರೀತ್ ಬುಮ್ರಾ ಅವರ ಸ್ನಾಯುಗಳಲ್ಲಿನ ಊತವು ವಾಸಿಯಾದ ನಂತರ ಅವರು ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೂ ಮೊದಲು, ಬುಮ್ರಾ ಬೆನ್ನು ಸಮಸ್ಯೆಯ ವಿರುದ್ಧ ಹೋರಾಡಿದ್ದರು. ಆ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಟೀಮ್ ಇಂಡಿಯಾದಿಂದ ಬಹಳ ಕಾಲ ಹೊರಗಿದ್ದರು. ಇದೀಗ ಮತ್ತೆ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಮತ್ತು ಐದನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದರು. ಅದ್ಭುತ ಲಯದಲ್ಲಿ ಬೌಲಿಂಗ್ ಪ್ರದರ್ಶನ ಮಾಡುತ್ತಿದ್ದ ಅವರು ಇದ್ದಕ್ಕಿದ್ದಂತೆ ಸಮಸ್ಯೆ ಎದುರಿಸಿದ್ದರು. ನಂತರ ಅವರು ಮೈದಾನವನ್ನು ತೊರೆದಿದ್ದರು. ಇದಾದ ಬಳಿಕ ಅವರು ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಬಂದರೂ ಬೌಲಿಂಗ್ ಮಾಡಲಿಲ್ಲ. 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಿಂದ ಬುಮ್ರಾ ಹೊರಗುಳಿದರೆ, ಅದು ಟೀಮ್ ಇಂಡಿಯಾ ಮತ್ತು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಆಘಾತವಾಗಲಿದೆ.
ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ ಬದಲಿಗೆ ಮತ್ತೊಬ್ಬ ವೇಗ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ. ಇದಕ್ಕಾಗಿ ಅವರನ್ನು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೂ ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧ ಶಮಿ ಅದ್ಭುತ ಪ್ರದರ್ಶನ ನೀಡಿದರೆ, ಟೀಮ್ ಇಂಡಿಯಾದ ಟೆಕ್ಷನ್ ಕಡಿಮೆಯಾಗಲಿದೆ. ಶಮಿ ಜೊತೆಗೆ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ವೇಗದ ಬೌಲಿಂಗ್ ವಿಭಾಗದಲ್ಲಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.