ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋತಿರುವ ಭಾರತ ತಂಡ ಟೀಕೆಗಳನ್ನು ಎದುರಿಸುಂತಾಗಿದೆ. ಇದರ ಮಧ್ಯೆ ಇಂಗ್ಲೆಂಡ್ ತಂಡ ಏಕದಿನ ಮತ್ತು ಟಿ20 ಸರಣಿಗಳಿಗಾಗಿ ಭಾರತ ಪ್ರವಾಸ ಮಾಡಲಿದೆ. ಈ ಸರಣಿಗಾಗಿ ಭಾರತ ತಯಾರಾಗುವ ಹಂತದಲ್ಲಿದ್ದು, ಅದಕ್ಕೂ ಮುನ್ನ ಟೀಮ್ ಇಂಡಿಯಾ ಅಭಿಮಾನಿಗಳಿಗೆ ನಿರಾಸೆಯಾಗಿದೆ. ವರದಿಗಳ ಪ್ರಕಾರ ಇಂಗ್ಲೆಂಡ್ ವಿರುದ್ಧ ವೈಟ್ ಬಾಲ್ ಸರಣಿಯಿಂದ ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ವಿಶ್ರಾಂತಿ ಪಡೆಯಬಹುದು. ಜಸ್ಪ್ರೀತ್ ಬುಮ್ರಾ ಬೆನ್ನು ಸೆಳೆತದಿಂದ ಬಳಲುತ್ತಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರು ಸಿಡ್ನಿಯಲ್ಲಿ ನಡೆದ ಐದನೇ ಟೆಸ್ಟ್ನ ಎರಡನೇ ದಿನದಂದು ಬೆನ್ನು ನೋವಿನಿಂದ ಮೈದಾನದಿಂದ ಹೊರನಡೆದಿದ್ದರು. ನಂತರ ಅವರು ಪಂದ್ಯದಲ್ಲಿ ಒಂದೇ ಒಂದು ಓವರ್ ಅನ್ನು ಬೌಲಿಂಗ್ ಮಾಡಲಿಲ್ಲ. ಹಾಗಾಗಿ ಬುಮ್ರಾಗೆ ವಿಶ್ರಾಂತಿಯ ಅಗತ್ಯವಿದೆ ಎಂಬುದು ಸ್ಪಷ್ಟವಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ 150ಕ್ಕೂ ಹೆಚ್ಚು ಓವರ್ಗಳನ್ನು ಬೌಲಿಂಗ್ ಮಾಡಿದ್ದರು. ಅತಿಯಾದ ಕೆಲಸದ ಹೊರೆಯಿಂದಾಗಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರಾ ಎಂದು ಖಚಿತಪಡಿಸಿಕೊಳ್ಳಲು ಬಿಸಿಸಿಐ ವೈದ್ಯಕೀಯ ತಂಡ ಪ್ರಯತ್ನಿಸುತ್ತದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪ್ರದರ್ಶನವು ಹೆಚ್ಚಾಗಿ ಜಸ್ಪ್ರೀತ್ ಬುಮ್ರಾ ಉಪಸ್ಥಿತಿಯನ್ನು ಅವಲಂಬಿಸಿದೆ.
ಜಸ್ಪ್ರೀತ್ ಬುಮ್ರಾ ಅವರ ಬೆನ್ನು ನೋವಿನ ಗಾಯದ ಮಟ್ಟ ಇನ್ನೂ ತಿಳಿದುಬಂದಿಲ್ಲ. ಭಾರತ ತನ್ನ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಬಾಂಗ್ಲಾದೇಶ ವಿರುದ್ಧ ಫೆಬ್ರವರಿ 20 ರಂದು ದುಬೈನಲ್ಲಿ ಪ್ರಾರಂಭಿಸಲಿದೆ. ಜಸ್ಪ್ರೀತ್ ಬುಮ್ರಾ ಅವರ ಗಾಯದ ಮಟ್ಟವೂ ಕಡಿಮೆ ಇದ್ದರೆ, ಅವರು ಆಟಕ್ಕೆ ಮರಳುವ ಮೊದಲು ಕನಿಷ್ಠ ಮೂರು ವಾರಗಳ ಪುನರ್ವಸತಿಯಲ್ಲಿ ಕಳೆಯಬೇಕಾಗುತ್ತದೆ.
ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ವಿಶೇಷವಾಗಿ ಈ ಟೂರ್ನಿ ಹೈಬ್ರೀಡ್ ಮಾದರಿಯಲ್ಲಿ ನಡೆಯಲಿದೆ.
ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಟಿ20 ಸರಣಿಯನ್ನು ಆಡುವುದು ಅನುಮಾನ ಎನ್ನಲಾಗುತ್ತಿದೆ. ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಅವರು ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಕನಿಷ್ಠ ಎರಡನ್ನಾದರೂ ಆಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಇಂಗ್ಲೆಂಡ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಬುಮ್ರಾ ಅವರು ಕೂಡ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.