ಇದೇ ವರ್ಷದ ಆಗಸ್ಟ್ನಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ ಟಿ20 ಸರಣಿ ವೇಳೆ ಭಾರತ ತಂಡದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳುವ ಸಾಧ್ಯತೆ ಇದೆ.
ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಗಂಭೀರವಾದ ಬೆನ್ನುನೋವಿನ ಕಾರಣದಿಂದ, 2022ರ ಟಿ20 ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸೇರಿದಂತೆ ಹಲವು ಸರಣಿಗಳನ್ನು ತಪ್ಪಿಸಿಕೊಳ್ಳಬೇಕಾಯಿತು.

ನ್ಯೂಸ್ 18 ವರದಿಯ ಪ್ರಕಾರ, ಮಾರ್ಚ್ನಲ್ಲಿ ಬೆನ್ನು ಶಸ್ತ್ರಚಿಕಿತ್ಸೆಯ ನಂತರ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅತ್ಯುತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಂಡುಬಂದಿದೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ "ಗರಿಷ್ಠ ಫಿಟ್ನೆಸ್' ಪಡೆದುಕೊಳ್ಳುವ ಸಾಧ್ಯತೆ ಇದೆ.
"ಜಸ್ಪ್ರೀತ್ ಬುಮ್ರಾ ಈ ವರ್ಷದ ಆಗಸ್ಟ್ನಲ್ಲಿ ಐರ್ಲೆಂಡ್ ವಿರುದ್ಧದ ಸರಣಿಗೆ ಅದ್ಭುತವಾಗಿ ತಯಾರಾಗುತ್ತಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡಕ್ಕೆ ಖುಷಿಯ ವಿಚಾರವಾಗಿದೆ ಮತ್ತು ಸುದೀರ್ಘ ಗಾಯದ ವಿರಾಮದ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಎಲ್ಲವೂ ಸರಿಯಾಗಿದ್ದರೆ ಗರಿಷ್ಠ ಫಿಟ್ನೆಸ್ನೊಂದಿಗೆ ಜಸ್ಪ್ರೀತ್ ಬುಮ್ರಾ ಮೈದಾನಕ್ಕಿಳಿಯುವ ಸಾಧ್ಯತೆಯಿದೆ," ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಅವರು ಪುನರ್ವಸತಿಯಲ್ಲಿ ಹೇಗೆ ಪ್ರಗತಿ ಸಾಧಿಸುತ್ತಿದ್ದಾರೆ ಎಂಬುದರ ಕುರಿತು ಬಿಸಿಸಿಐ ಅಧಿಕಾರಿಯೊಬ್ಬರು ಮತ್ತಷ್ಟು ಮಾಹಿತಿ ನೀಡಿದ್ದಾರೆ.
ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರ ಕಣ್ಗಾವಲಿನ ಜೊತೆಗೆ, ಜಸ್ಪ್ರೀತ್ ಬುಮ್ರಾ ಅವರು ಕ್ರೀಡಾ ವಿಜ್ಞಾನ ಮತ್ತು ವೈದ್ಯಕೀಯ ವಿಭಾಗದ ಮುಖ್ಯಸ್ಥ ನಿತಿನ್ ಪಟೇಲ್ ಅವರೊಂದಿಗೂ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ.
ಇನ್ನು ಫಿಸಿಕಲ್ ಚಿಕಿತ್ಸಕರಾಗಿರುವ ಎಸ್ ರಜನಿಕಾಂತ್ ಅವರು ಜಸ್ಪ್ರೀತ್ ಬುಮ್ರಾ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ವೇಗಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಿಸಲು ಎನ್ಸಿಎ ಖಚಿತಪಡಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
"ನಿತಿನ್ ಪಟೇಲ್ ಮತ್ತು ಎಸ್ ರಜನಿಕಾಂತ್ ಅವರು ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಎನ್ಸಿಎನಲ್ಲಿ ತರಬೇತಿಯ ಅವಧಿಯಲ್ಲಿ ಅವರನ್ನು ಟ್ರ್ಯಾಕ್ ಮಾಡುತ್ತಿದ್ದಾರೆ".
ನಿತಿನ್ ಪಟೇಲ್ ಮತ್ತು ಎಸ್ ರಜನಿಕಾಂತ್ ಇಬ್ಬರೂ ಬಹಳ ಅನುಭವಿಗಳಾಗಿದ್ದು, ಅತ್ಯಂತ ನಿರ್ಣಾಯಕವಾಗಿರುವ ಏಕದಿನ ವಿಶ್ವಕಪ್ ವರ್ಷ ಮತ್ತು ಹೊಸ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಚಕ್ರದ ಪ್ರಾರಂಭದಲ್ಲಿ ಜಸ್ಪ್ರೀತ್ ಬುಮ್ರಾ ಅವರನ್ನು ತಯಾರುಗೊಳಿಸಲು ಎಲ್ಲ ಪ್ರಯತ್ನ ನಡೆಸುತ್ತಿದ್ದಾರೆ.
ಜಸ್ಪ್ರೀತ್ ಬುಮ್ರಾ ಪುನರಾಗಮನವು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿಯೇ ನಡೆಯುವ ಏಕದಿನ ವಿಶ್ವಕಪ್ ಗೆಲ್ಲುವ ಪ್ರಯತ್ನದಲ್ಲಿ ಭಾರತದ ಬೌಲಿಂಗ್ ಪಡೆಯನ್ನು ಇನ್ನಷ್ಟು ಬಲಪಡಿಸುತ್ತದೆ.