ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್, ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಬೆನ್ನುನೋವಿನಿಂದಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ವಿರಾಮ ಪಡೆದು, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ.
ಆಗಸ್ಟ್ 18ರಿಂದ 23 ರವರೆಗೆ ನಡೆಯಲಿರುವ ಐರ್ಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ, ಜುಲೈ 31ರಂದು ಪ್ರಕಟಿಸಿತು.

ಸೆಪ್ಟೆಂಬರ್ 2022ರಿಂದ ಕ್ರಿಕೆಟ್ನಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ, ನಿರಂತರ ಬೆನ್ನುನೋವಿನಿಂದ ಬಳಲುತ್ತಿದ್ದರು. ಇದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು ಅಗತ್ಯವಾಗಿತ್ತು. ಮಾರ್ಚ್ 2023ರಲ್ಲಿ ನ್ಯೂಜಿಲೆಂಡ್ನ ಕ್ರೈಸ್ಟ್ಚರ್ಚ್ನಲ್ಲಿ ಬುಮ್ರಾ ಅವರು ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾದರು.
ಶಸ್ತ್ರಚಿಕಿತ್ಸೆಯ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಪುನರ್ವಸತಿ ಅವಧಿಯನ್ನು ಪೂರ್ಣಗೊಳಿಸಿದರು. ಭಾರತೀಯ ಮಾಜಿ ಕ್ರಿಕೆಟಿಗ ಹಾಗೂ ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ನೇತೃತ್ವದ ಸಿಬ್ಬಂದಿಯ ಕಣ್ಗಾವಲಿನಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ ಫಿಟ್ನೆಸ್ ಮತ್ತು ಬೌಲಿಂಗ್ ಮೇಲೆ ಗಮನ ಕೇಂದ್ರಿಕರಿಸಿದರು.
ಇದೇ ವೇಳೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಅವರು ಭಾರತ ತಂಡಕ್ಕೆ ಪುನರಾಗಮನ ಮಾಡುತ್ತಿರುವ ಬಗ್ಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರ ಚೇತರಿಕೆಯ ಪ್ರಕ್ರಿಯೆಯನ್ನು ಬಿಸಿಸಿಐ ನಿಕಟವಾಗಿ ಮೇಲ್ವಿಚಾರಣೆ ಮಾಡಿದೆ. ಅಲ್ಲದೆ, ಅವರ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ.
ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಯಶಸ್ವಿ ಪುನರ್ವಸತಿ ಮತ್ತು ಐರ್ಲೆಂಡ್ ಸರಣಿಗಾಗಿ ಭಾರತ ಟಿ20 ತಂಡದ ನಾಯಕನಾಗಿ ಆಯ್ಕೆಯಾಗಿದ್ದು, ಸ್ಪರ್ಧಾತ್ಮಕ ಕ್ರಿಕೆಟ್ಗೆ ಹಿಂದಿರುಗಿದ ಅವರ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ.
ಕಳೆದ ವರ್ಷ ಇಂಗ್ಲೆಂಡ್ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ನಾಯಕರಾಗಿದ್ದರು. ಐರ್ಲೆಂಡ್ ಸರಣಿಗೆ ನಾಯಕನಾಗಿ ಬುಮ್ರಾ ನೇಮಕ ಮಾಡಿರುವುದು ಅವರ ನಾಯಕತ್ವದ ಸಾಮರ್ಥ್ಯ ಮತ್ತು ಬೌಲರ್ ಆಗಿ ಲಭ್ಯತೆಯನ್ನು ಒತ್ತಿಹೇಳುತ್ತದೆ.
ಜಸ್ಪ್ರೀತ್ ಬುಮ್ರಾ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳುವುದನ್ನು ಅಭಿಮಾನಿಗಳು ಮತ್ತು ಕ್ರಿಕೆಟ್ ಪಂಡಿತರು ಕುತೂಹಲದಿಂದ ನಿರೀಕ್ಷಿಸುತ್ತಿದ್ದಾರೆ. ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಬಲಪಡಿಸುವುದಲ್ಲದೆ, ತಂಡದ ನಾಯಕತ್ವದ ಗುಂಪಿಗೆ ಮತ್ತೊಂದು ಆಯ್ಕೆಯನ್ನು ತೋರಿಸುತ್ತದೆ.
ಜಸ್ಪ್ರೀತ್ ಬುಮ್ರಾ ಅವರನ್ನು ಮತ್ತೊಮ್ಮೆ ಭಾರತೀಯ ಜೆರ್ಸಿಯಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಐರ್ಲೆಂಡ್ ನೆಲದಲ್ಲಿ ಭಾರತ ತಂಡವನ್ನು ಮುನ್ನಡೆಸುವುದಲ್ಲದೆ, ಅವರ ಸಿಗ್ನೇಚರ್ ಯಾರ್ಕರ್ಗಳ ಮೂಲಕ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಲು ಎದುರು ನೋಡುತ್ತಿದ್ದಾರೆ.
ಪ್ರಸ್ತುತ, ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಬಹು ಮಾದರಿಯ ಸರಣಿಯನ್ನು ಆಡುತ್ತಿದೆ. ಮುಂಬರುವ 2023ರ ಏಷ್ಯಾ ಕಪ್ ಮತ್ತು 2023ರ ವಿಶ್ವಕಪ್ ಪಂದ್ಯಾವಳಿಗಾಗಿ ಜಸ್ಪ್ರೀತ್ ಬುಮ್ರಾ ಅವರು ಭಾರತ ತಂಡದಲ್ಲಿ ಪ್ರಮುಖ ಆಟಗಾರನಾಗಿರುತ್ತಾರೆ.
ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.