ತವರು ನೆಲದಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್ಗಳ ವಿರುದ್ಧ ಭಾರತದ ಬ್ಯಾಟರ್ಗಳು ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾದರು. ಪರಿಣಾಮ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಟೆಸ್ಟ್ ಸರಣಿಯನ್ನು 0-3 ಅಂತರದಲ್ಲಿ ಕಳೆದುಕೊಂಡಿತ್ತು. ಈ ಸೋಲಿನ ಬಳಿಕ ಭಾರತ ತಂಡದ ಟಾಪ್ ಆರ್ಡರ್ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಆಸ್ಟ್ರೇಲಿಯಾದಲ್ಲಿ ಬ್ಯಾಟರ್ಗಳು ಯಶಸ್ಸು ಸಾಧಿಸಲು ಸಲಹೆ ಕೊಟ್ಟಿದ್ದಾರೆ.
ತವರಿನಲ್ಲಿ ನಡೆದ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿಲ್ಲ. ಇದರಿಂದಾಗಿ ಈ ಇಬ್ಬರು ಸ್ಟಾರ್ ಆಟಗಾರರು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಬೇಕು ಎಂಬ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ ಇಂತಹ ಸಂದರ್ಭದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ಗೆ ಮರಳಲು ಯಶಸ್ಸಿನ ಮಂತ್ರವನ್ನು ಕಪಿಲ್ ದೇವ್ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಕಪಿಲ್ ದೇವ್, 'ನಿಮ್ಮ ಬೇರುಗಳಿಗೆ ಹಿಂತಿರುಗಲು ಸಾಕಷ್ಟು ಅಭ್ಯಾಸ ನಡೆಸುವುದು ಒಂದೆ ಮಾರ್ಗ. ಮನೆಯಲ್ಲಿ ಕುಳಿತು ತಮ್ಮ ಫಾರ್ಮ್ ಸುಧಾರಿಸಿಕೊಳ್ಳಬಹುದು ಎಂದುಕೊಂಡರೆ ಅದು ಸಾಧ್ಯವಿಲ್ಲ. ನೀವು ಕೆಟ್ಟ ಸಮಯವನ್ನು ಎದುರಿಸುತ್ತಿರುವಾಗ, ಅಭ್ಯಾಸವು ಏಕೈಕ ತ್ವರಿತ ಪರಿಹಾರವಾಗಿದೆ. ನೀವು ಹೆಚ್ಚು ಅಭ್ಯಾಸ ಮಾಡಿದರೆ, ನೀವು ಉತ್ತಮರಾಗುತ್ತೀರಿ ಎಂದು ಟೀಮ್ ಇಂಡಿಯಾ ಬ್ಯಾಟರ್ಗಳಿಗೆ ಸಲಹೆ ನೀಡಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಫಲಿತಾಂಶದ ಬಗ್ಗೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈಗಾಗಲೇ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವ ನಾಯಕನ ಪ್ರಕಾರ, ಕಾಂಗರೂ ಪಡೆ ಭಾರತವನ್ನು ತವರು ನೆಲದಲ್ಲಿ 3-1 ರಿಂದ ಸೋಲಿಸುತ್ತದೆ. ಮುಂಬರುವ ಸರಣಿಯಲ್ಲಿ ಭಾರತ ತಂಡವು ಮೊಹಮ್ಮದ್ ಶಮಿ ಅನುಪಸ್ಥಿತಿಯನ್ನು ಅನುಭವಿಸಲಿದೆ. ಶಮಿ ಅನುಪಸ್ಥಿತಿಯಲ್ಲಿ ಭಾರತಕ್ಕೆ ಎದುರಾಳಿ ತಂಡದಿಂದ 20 ವಿಕೆಟ್ಗಳನ್ನು ಪಡೆಯುವುದು ಕಷ್ಟಕರವಾಗಿದೆ. ಶಮಿ ಇಲ್ಲದೆ ಭಾರತದ ಬೌಲಿಂಗ್ ವಿಭಾಗಕ್ಕೆ ಯಶಸ್ವಿಯಾಗುವುದು 'ದೊಡ್ಡ ಸವಾಲು' ಎಂದು ಹೇಳಿದ್ದಾರೆ.
2016-17 ರಿಂದ ನಡೆದ ಎಲ್ಲಾ ನಾಲ್ಕು ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಳಲ್ಲಿ ಕಾಂಗೂರು ಪಡೆಯನ್ನು ಭಾರತ ಸೋಲಿಸಿದೆ. ಕಳೆದ ಬಾರಿ ಆಸ್ಟ್ರೇಲಿಯಾ ತಂಡವನ್ನು ತವರಿನಲ್ಲಿ ಟೀಮ್ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಇದೀಗ ಕಾಂಗೂರು ನೆಲದಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಭಾರತ ಕಣ್ಣಿಟ್ಟಿದೆ.