ಇದೇ ಡಿಸೆಂಬರ್ 21 ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಏಕದಿನ ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸುತ್ತಿದ್ದು, ಉಪನಯಕನ ಜವಾಬ್ದಾರಿಯನ್ನು ಆಲ್ರೌಂಡರ್ ಶ್ರೇಯಸ್ ಗೋಪಾಲ್ ಅವರಿಗೆ ನೀಡಲಾಗಿದೆ. ತಂಡದಲ್ಲಿ ಅನುಭವಿ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಹಲವು ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಸೌದಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಅನ್ ಸೋಲ್ಡ್ ಆಗಿರುವ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿ ಸೀಮಿತ ಓವರ್ಗಳ ತಂಡಕ್ಕೆ ನಾಯಕರನ್ನಾಗಿ ಮಾಡಲಾಗಿದೆ. ಇನ್ನು ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಶ್ರೇಯಸ್ ಗೋಪಾಲ್ ಅವರಿಗೆ ತಂಡದ ಉಪನಾಯಕ ಸ್ಥಾನ ನೀಡಲಾಗಿದೆ. ಶ್ರೇಯಸ್ ಗೋಪಾಲ್ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಪರ ಗರಿಷ್ಠ ವಿಕಟ್ ಪಡೆದ ಬೌಲರ್. ಇವರು ಏಳು ಪಂದ್ಯಗಳಲ್ಲಿ 14 ವಿಕೆಟ್ ಪಡೆದು ಬೀಗಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿರುವ ಅನುಭವ ಹೊಂದಿರುವ ಮನೀಷ್ ಪಾಂಡೆ ಅವರಿಗೆ ವಿಜಯ್ ಹಜಾರೆ ಏಕದಿನ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಇವರು ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.
ಕರ್ನಾಟಕ ವಿಜಯ್ ಹಜಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡವನ್ನು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎದುರಿಸಲಿದೆ. ಕರ್ನಾಟಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಕರ್ನಾಟಕ ಮತ್ತು ಮುಂಬೈ ಹೊರತುಪಡಿಸಿ, ಸಿ ಗುಂಪಿನಲ್ಲಿ ಪುದುಚೇರಿ, ಪಂಜಾಬ್, ಅರುಣಾಚಲ ಪ್ರದೇಶ, ಸೌರಾಷ್ಟ್ರ, ಹೈದರಾಬಾದ್ ಮತ್ತು ನಾಗಾಲ್ಯಾಂಡ್ ತಂಡಗಳು ಭಾಗವಹಿಸುತ್ತಿವೆ.
ಕರ್ನಾಟಕದ ದೇಶೀಯ ಏಕದಿನ ಟೂರ್ನಿಯಲ್ಲಿ ಐದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಕರ್ನಾಟಕ ಕೊನೆಯ ಬಾರಿಗೆ 2019 ಹಾಗೂ 20ರಲ್ಲಿ ಪ್ರಶಸ್ತಿ ಗೆದ್ದಿತ್ತು.
ಈ ಬಾರಿ ಕರ್ನಾಟಕ ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರರು ಇದ್ದು, ಕಪ್ ಗೆಲ್ಲುವ ಉತ್ತಮ ಅವಕಾಶ ತಂಡಕ್ಕಿದೆ. ಇನ್ನು ಭರವಸೆಯ ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಇನ್ನು ಅಂಡರ್ 19 ವಿಶ್ವಕಪ್ನಲ್ಲಿ ಭಾರತದ ಪರ ಆಡಿರುವ ಹಾರ್ದಿಕ್ ರಾಜ್ ಅವರಿಗೆ ತಂಡದಲ್ಲಿ ಸ್ಥಾನ ಲಭಿಸಿದೆ. ಮಹಾರಾಜ ಟ್ರೋಫಿಯಲ್ಲಿ ಮನಮೋಹಕ ಪ್ರದರ್ಶನ ನೀಡಿರುವ ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕರ್ನಾಟಕ ತಂಡಕ್ಕೆ ಈ ಬಾರಿ ಕಪ್ ಗೆಲ್ಲುವ ಅವಕಾಶ ಇದೆ.
ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ಎಸ್ ನಿಕಿನ್ ಜೋಸ್, ಕೆವಿ ಅನೀಶ್, ಆರ್ ಸ್ಮರನ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಹಾರ್ದಿಕ್ ರಾಜ್, ವೈಶಾಕ್ ವಿಜಯ್ ಕುಮಾರ್, ವಾಸುಕಿ ಕೌಶಿಕ್, ವಿದ್ಯಾಧರ್ ಪಾಟೀಲ್, ಕಿಶನ್ ಬೇಡರೆ, ಅಭಿಲಾಷ್ ಶೆಟ್ಟಿ , ಮನೋಜ್ ಭಾಂಡಗೆ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ.