
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಭೀಕರ ವಿಮಾನ ದುರಂತದ ಒಂದು ದಶಕದ ನಂತರ ಅದೇ ಮಾದರಿಯ ದುರಂತ ಕೇರಳದಲ್ಲಿ ನಡೆದಿದೆ. ವಿದೇಶದಲ್ಲಿದ್ದ ಭಾರತೀಯರನ್ನು ಹೊತ್ತು ತಂದಿದ್ದ ಏರ್ ಇಂಡಿಯಾ ವಿಮಾನದಲ್ಲಿ 190 ಮಂದಿ ಪ್ರಯಾಣಸಿದ್ದರು. ಈ ಭೀಕರ ಅಪಘಾತಕ್ಕೆ ಟೀಮ್ ಇಂಡಿಯಾ ಕ್ರಿಕೆಟಿಗರು ಆಘಾತ ವ್ಯಕ್ತಪಡಿಸಿದ್ದಾರೆ.
ಪೈಲಟ್ ಸಹಿತ 18 ಮಂದಿ ಪ್ರಯಾಣಿಕರು ಈ ದುರಂತದಲ್ಲಿ ಸಾವನ್ನಪ್ಪಿದ್ದು 40ರಷ್ಟು ಪ್ರಯಾಣಿಕರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ದುರಂತಕ್ಕೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು ವಿಮಾನದಲ್ಲಿದ್ದ ಎಲ್ಲರಿಗಾಗಿ ಪ್ರಾರ್ಥಿಸುತ್ತೇನೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟಂಬಸ್ಥರಿಗೆ ನನ್ನ ಸಂತಾಪಗಳು ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
ಕೊರೊನಾ ವೈರಸ್ನ ಕಾರಣದಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿತ್ತು. ಆದರೆ ಲ್ಯಾಂಡಿಂಗ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಬದುಕುಳಿದವರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಪ್ರಾಣ ಕಳೆದುಕೊಂಡವರ ಕುಟಂಬಕ್ಕೆ ನನ್ನ ಸಾಂತ್ವಾನಗಳು ಎಂದು ಪ್ರತಿಕ್ರಿಯಿಸಿದ್ದಾರೆ.
ಈ ದುರಂತವನ್ನು ಆಘಾತಕಾರಿ ಸುದ್ದಿ ಎಂದು ಟೀಮ್ ಇಂಡಿಯಾ ಸೀಮಿತ ಓವರ್ಗಳ ನಾಯಕ ರೊಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಪ್ರಯಾಣಿಕರು ಹಾಗೂ ಏರ್ ಇಂಡಿಯಾದ ಎಲ್ಲಾ ಸಿಬ್ಬಂದಿಗಳಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ದುರಂತಕ್ಕೆ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಗೌತಮ್ ಗಂಭೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಯುವರಾಜ್ ಸಿಂಗ್ ಪ್ರಯಾಣಿಕರು ಹಾಗೂ ಸಿಬ್ಬಂದಿಗಳಿಗಾಗಿ ಪ್ರಾರ್ಥಿಸುತ್ತೇಮೆ ಎಂದು ಹೇಳುತ್ತಾ, 2020 ದಯವಿಟ್ಟು ಕರುಣೆ ತೋರಿಸು ಎಂದು ಟ್ವೀಟ್ ಮಾಡಿದ್ದಾರೆ. ಗಾಯಗೊಂಡಿರುವ ಎಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.