ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೂರು ಬದಲಾವಣೆಗಳೊಂದಿಗೆ ಅಂಗಳಕ್ಕೆ ಇಳಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವ ಕಾಂಬಿನೇಷನ್ ನೊಂದಿಗೆ ಅಂಗಳಕ್ಕೆ ಇಳಿಯುತ್ತಾರೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಅಭಿಮಾನಿಗಳ ಆಸೆ ಕೊನೆಗೂ ಫಲಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಈ ವೇಳೆ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಆಟಗಾರ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಟ್ಟಿದೆ. ಇವರ ಬದಲಿಗೆ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ಸರ್ಫರಾಜ್ ಖಾನ್ಗೆ ಅವಕಾಶ ನೀಡಲಾಗಿದೆ.

ಭಾರತ ತಂಡದ ಪರ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದಿದ್ದ ಕೆಎಲ್ ರಾಹುಲ್, ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಲಿಲ್ಲ. ಮೊದಲ ಇನಿಂಗ್ಸ್ನಲ್ಲಿ ಜವಾಬ್ದಾರಿ ಮರೆತರು. ಎರಡನೇ ಇನಿಂಗ್ಸ್ನಲ್ಲಿ ನೆಲಕಚ್ಚಿ ಬ್ಯಾಟ್ ಮಾಡುವ ಅವಕಾಶ ನೀಡಿದರು. ಆದರೆ ತಂಡ ಸಂಕಷ್ಟದಲ್ಲಿದ್ದಾಗ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ರಾಹುಲ್ ವಿಫಲರಾದರು. ಇವರು ಬೆಂಗಳೂರು ಚಿನ್ನಸ್ವಾಮಿ ಅಂಗಳದಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವುದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.
ರಾಹುಲ್ ಬರೀ ಒಂದೇ ಇನಿಂಗ್ಸ್ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಕ್ಕೆ ಮಾತ್ರ ಇವರನ್ನು ತಂಡದಿಂದ ಹೊರ ಗಿಟ್ಟಿಲ್ಲ. ಬಾಂಗ್ಲಾದೇಶದ ವಿರುದ್ಧ ಪಂದ್ಯದಲ್ಲೂ ಇವರು ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ಅಲ್ಲದೆ ಕಳೆದ ಎರಡು ವರ್ಷಗಳಿಂದ ರಾಹುಲ್ ಅವರು ಟೆಸ್ಟ್ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ಸ್ಥಾನಕ್ಕೆ ಕೊಕ್ಕೆ ಬಿದ್ದಿದೆ.

ಬೆಂಗಳೂರು ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 46 ರನ್ಗಳಿಗೆ ಆಲೌಟ್ ಆಯಿತು. ಆದರೆ ಎರಡನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾಕ್ಕೆ ಆಧಾರವಾಗಿದ್ದ ಆಟಗಾರ ಸರ್ಫರಾಜ್ ಖಾನ್. ಇವರು ತಮ್ಮ ಕ್ಲಾಸ್ ಆಟದ ಪ್ರದರ್ಶನ ನೀಡಿ, 150 ರನ್ ಬಾರಿಸಿದ್ದರು. ಅಲ್ಲದೆ ಇದೇ ಇನಿಂಗ್ಸ್ನಲ್ಲಿ ರಿಷಭ್ ಪಂತ್ 99 ರನ್ ಸಿಡಿಸಿ ತಂಡಕ್ಕೆ ಆಧಾರವಾಗಿದ್ದರು.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶುಭಮನ್ ಗಿಲ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿರಲಿಲ್ಲ. ಇವರು ಗಾಯದಿಂದ ಚೇತರಿಸಿಕೊಂಡಿದ್ದು, ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಹಾಗೂ ಸರ್ಫರಾಜ್ ಖಾನ್ ಅವರಲ್ಲಿ ಒಬ್ಬರ ಸ್ಥಾನಕ್ಕೆ ಕತ್ತರಿ ಬೀಳುವ ಸಾಧ್ಯತೆ ಇತ್ತು.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ.