ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ದಿನಗಣನೆ ಆರಂಭವಾಗಿದೆ. ಈಗಾಗಲೇ ಜೂನ್ 27ರಂದು ಅಂತಿಮ ಹಾಗೂ ಸಂಪೂರ್ಣ ವೇಳಾಪಟ್ಟಿಯೂ ಬಿಡುಗಡೆಗೊಂಡಿದೆ.
ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 5ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಬಾರಿಯ ರನ್ನರ್-ಅಪ್ ನ್ಯೂಜಿಲೆಂಡ್ ತಂಡವನ್ನು ಎದುರಿಸುವುದರೊಂದಿಗೆ ವಿಶ್ವಕಪ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

ಇನ್ನು ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 15ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈ-ವೋಲ್ಟೇಜ್ ಪಂದ್ಯವನ್ನು ಅಹಮದಾಬಾದ್ನಲ್ಲಿ ಆಡಲಿದೆ.
ಇದಕ್ಕೂ ಮುನ್ನ 2023ರ ಏಷ್ಯಾ ಕಪ್ ಪಂದ್ಯಾವಳಿ ಸಹ ನಡೆಯಲಿದ್ದು, ಭಾರತ ತಂಡವು ಪ್ರಮುಖ ಆಟಗಾರರಾದ ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ರಿಷಭ್ ಪಂತ್ ಅವರ ಗಾಯಗಳಿಂದ ಆರಂಭಿಕ ಹಿನ್ನಡೆ ಅನುಭವಿಸುತ್ತಿದೆ.
ಕಳೆದ ವರ್ಷ ಸಂಭವಿಸಿದ ಭೀಕರ ರಸ್ತೆ ಅಪಘಾತದಿಂದ ರಿಷಭ್ ಪಂತ್ ಚೇತರಿಸಿಕೊಳ್ಳುತ್ತಿದ್ದರೆ, ಕೆಎಲ್ ರಾಹುಲ್ ತೊಡೆ ನೋವು ಮತ್ತು ಜಸ್ಪ್ರೀತ್ ಬುಮ್ರಾ ಬೆನ್ನಿನ ನೋವಿನಿಂದಾಗಿ ತಂಡದಿಂದ ದೂರವುಳಿದಿದ್ದಾರೆ.
2023ರ ಐಪಿಎಲ್ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಾಯಗೊಂಡರು. ಇದೇ ಕಾರಣದಿಂದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯದಿಂದಲೂ ಹೊರಗುಳಿಯಬೇಕಾಯಿತು.
ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ನಲ್ಲಿ ಪುನರ್ವಸತಿಗೆ ಒಳಗಾಗಿರುವ ಕೆಎಲ್ ರಾಹುಲ್, ಒಂದೆರಡು ವಾರಗಳಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೆಎಲ್ ರಾಹುಲ್ ಭಾರತ ತಂಡಕ್ಕೆ ಪುನರಾಗಮನದ ಸುದ್ದಿಗಳಿಗೆ ಭಾರತದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಪ್ರತಿಕ್ರಿಯಿಸಿದ್ದು, ರಾಹುಲ್ ಮೊದಲು ದೇಶೀಯ ಟೂರ್ನಿಯಲ್ಲಿ ಆಡುವ ಮೂಲಕ ತನ್ನನ್ನು ತಾನು ಸಾಬೀತುಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
"ಕೆಎಲ್ ರಾಹುಲ್ ತಮ್ಮ ಫಿಟ್ನೆಸ್ ಮತ್ತು ಬ್ಯಾಟಿಂಗ್ ಫಾರ್ಮ್ ನಿರ್ಣಯಿಸಲು ಅವರು ದೇಶೀಯ ಕ್ರಿಕೆಟ್ನಲ್ಲಿ ಆಡಬೇಕು. ಭಾರತ ತಂಡಕ್ಕೆ ಮರಳುವುದು ಅಷ್ಟು ಸುಲಭವಲ್ಲ, ನೀವು ನೆಟ್ಸ್ನಲ್ಲಿ ಅಭ್ಯಾಸ ಮಾಡಿ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಸಿದ್ಧರಾಗಿ," ಎಂದು ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಟ್ವೀಟ್ ಮಾಡಿದ್ದಾರೆ.
ಐಪಿಎಲ್ 2023ರ ಅವಧಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಾಯಿ ಸುದರ್ಶನ್ ಅವರಂತಹ ಆಟಗಾರರನ್ನು ಭಾರತ ತಂಡದಲ್ಲಿ ನೋಡಬೇಕು ಎಂದು ಕ್ರಿಕೆಟಿಗ ಕಂ ಕಾಮೆಂಟೇಟರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಭಾರತ ತಂಡದ ಮ್ಯಾನೇಜ್ಮೆಂಟ್ಗೆ ಸಲಹೆ ನೀಡಿದ್ದಾರೆ.
ಇನ್ನು ಕಳೆದ ತಿಂಗಳು ಕೆಎಲ್ ರಾಹುಲ್ ಅವರು ಯಶಸ್ವಿಯಾಗಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. "ನಾನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದ್ದೇನೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ ಎಂದು ಖಚಿತಪಡಿಸಿದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ದೊಡ್ಡ ಧನ್ಯವಾದಗಳು. ನಾನು ಈಗ ಅಧಿಕೃತವಾಗಿ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ. ನಾನು ನನ್ನ ಅತ್ಯುತ್ತಮ ಸ್ಥಿತಿಗೆ ಮರಳಲು ಮತ್ತು ಮೈದಾನಕ್ಕೆ ಹಿಂತಿರುಗಲು ನಿರ್ಧರಿಸಿದ್ದೇನೆ," ಎಂದು ಕೆಎಲ್ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.