
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಪ್ರವಾಸೋದ್ಯಮ, ಯುವ ಸಬಲೀಕರಣ ಕ್ರೀಡಾ ಇಲಾಖೆಯು ಕನ್ನಡ ರಾಜ್ಯೋತ್ಸವ ದಿನದಂದು 2017, 2018 ಮತ್ತು 2019ನೇ ಸಾಲಿನ ಏಕಲವ್ಯ, ಜೀವವವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿತು. ಇದರಲ್ಲಿ ರಾಜ್ಯದ ಕ್ರಿಕೆಟಿಗರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ವೇದಾ ಕೃಷ್ಣಮೂರ್ತಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಲಭಿಸಿದೆ.
ಈ ಹಿನ್ನೆಲೆಯಲ್ಲಿ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್ ಇಂಡಿಯಾ ಆರಂಭಿಕ ಹಾಗೂ ಕಿಂಗ್ಸ್ ಇಲೆವೆನ್ ನಾಯಕ ಕೆ.ಎಲ್ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಉಪನಾಯಕನಾಗಿ ಆಯ್ಕೆಯಾಗಿರುವ ರಾಹುಲ್ಗೆ ಇದೀಗ ಮತ್ತೊಂದು ಗರಿ ಸಿಕ್ಕಿದೆ.
'' ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು'' ಎಂದು ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ.
ಇನ್ನು ಕೆ.ಎಲ್ ರಾಹುಲ್ ಸ್ನೇಹಿತ ಹಾಗೂ ಟೀಮ್ ಇಂಡಿಯಾ ಆಟಗಾರ ಮಯಾಂಕ್ ಅಗರ್ವಾಲ್ ಕೂಡ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.