ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡವುಣ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಟೆಸ್ಟ್ ಸರಣಿಯ ಬಳಿಕ ಉಭಯ ದೇಶಗಳ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ವೇಳೆ ತಂಡದ ಚುಕ್ಕಾಣಿಯನ್ನು ಹಿಡಿಯುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಕರ್ನಾಟಕದ ಸ್ಟಾರ್ ಪ್ಲೇಯರ್ ಕೆಎಲ್ ರಾಹುಲ್ ಅವರಿಗೆ ನಾಯಕತ್ವದ ಹೊಣೆಯನ್ನು ನೀಡಲಾಗಿದೆ.
ಏಕದಿನ ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪರ್ ಹಾಗೂ ನಾಯಕನ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯಿಂದ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಹೊರಗುಳಿದಿದ್ದಾರೆ. ಇವರು ಕುತ್ತಿಗೆಯ ಗಾಯಕ್ಕೆ ತುತ್ತಾಗಿದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ನಲ್ಲೂ ತಂಡದ ಭಾಗವಾಗಿರಲಿಲ್ಲ. ಈ ವೇಳೆ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಇನ್ನು ಶುಭಮನ್ ಗಿಲ್ ಅವರಿಗೆ ವಿಶ್ರಾಂತಿ ಅವಶ್ಯಕತೆ ಇರುವುದಿಂದ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದೆ. ಇವರ ಬದಲಿಗೆ ತಂಡವನ್ನು ಅನುಭವಿ ಬ್ಯಾಟರ್ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಕೆಎಲ್ ರಾಹುಲ್ ಈ ಮೊದಲೂ ನಾಯಕತ್ವ ವಹಿಸಿಕೊಂಡಿದ್ದಾರೆ. ರಾಹುಲ್ ಈ ಹಿಂದೆ ಏಕದಿನ ಪಂದ್ಯಗಳಲ್ಲಿ ನಾಯಕನಾಗಿ ಕೆಲಸ ಮಾಡಿದ ಅನುಭವ ಇದೆ. ಇವರ ಮುಂದಾಳತ್ವದಲ್ಲಿ ಭಾರತ 12 ಏಕದಿನ ಪಂದ್ಯಗಳಲ್ಲಿ, ಎಂಟು ಪಂದ್ಯಗಳಲ್ಲಿ ಗೆದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕ್ಯಾಚ್ ಹಿಡಿಯುವಾಗ ಗಾಯಕ್ಕೆ ತುತ್ತಾಗಿದ್ದ ಉಪನಾಯಕ ಶ್ರೇಯಸ್ ಅಯ್ಯರ್ ಸಹ ಏಕದಿನ ಸರಣಿಗೆ ಅಲಭ್ಯರಾಗಿದ್ದಾರೆ. ಇವರು ಚೇತರಿಕೆಗೆ ತಿಂಗಳುಗಳು ಬೇಕಾಗಿದ್ದರಿಂದ ಇವರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇನ್ನು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಏಕದಿನ ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ. ಮುಂದಿನ ವರ್ಷದ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಬುಮ್ರಾ ಪ್ರಸ್ತುತ ಟಿ20 ಕ್ರಿಕೆಟ್ನತ್ತ ಗಮನ ಹರಿಸುತ್ತಿದ್ದಾರೆ.

ಭಾರತ "ಎ" ಪರ ಅಮೋಘ ಪ್ರದರ್ಶನ ನೀಡಿರುವ ರುತುರಾಜ್ ಗಾಯಕ್ವಾಡ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಪ್ರಕಟಿತ ತಂಡದಲ್ಲಿ ಮೂವರು ವಿಕೆಟ್ ಕೀಪರ್ಗಳು ಇರುವುದು ವಿಶೇಷ. ಇನ್ನು ಪ್ರಸಿದ್ಧ್ ಕೃಷ್ಣ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಏಕದಿನ ಪಂದ್ಯ ಡಿಸೆಂಬರ್ 30, ಎರಡನೇ ಏಕದಿನ ಪಂದ್ಯ ಡಿಸೆಂಬರ್ 3, ಮೂರನೇ ಏಕದಿನ ಪಂದ್ಯ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ) (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೇಲ್.