ಬೆಂಗಳೂರಿನ ಐಕಾನಿಕ್ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯುತ್ತವೆಯೋ ಇಲ್ಲವೋ ಎಂಬ ಬಗ್ಗೆ ಈಗ ಸ್ಪಷ್ಟ ಉತ್ತರ ಸಿಕ್ಕಿದೆ. ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಐಪಿಎಲ್ ಸೇರಿದಂತೆ ಅಂತಾರಾಷ್ಟ್ರೀಯ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು. ಈಗ ಸರ್ಕಾರ ಈ ಮನವಿಗೆ ಸ್ಪಂದಿಸಿದೆ.
ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕ್ಟರಿ ಪೆರೇಡ್ ವೇಳೆ ನಡೆದ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದರು. ಈ ವೇಳೆ ಸರ್ಕಾರ ಒಂದು ಸಮಿತಿಯನ್ನು ನೇಮಕ ಮಾಡಿತ್ತು. ಸಮಿತಿ ಚಿನ್ನಸ್ವಾಮಿ ಮೈದಾನ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಎಂದು ತಿಳಿಸಿತ್ತು. ಈ ಬೆನ್ನಲ್ಲೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಮಹಿಳಾ ಏಕದಿನ ವಿಶ್ವಕಪ್ ಆತಿಥ್ಯವನ್ನು ಕೈ ತಪ್ಪಿಸಿಕೊಂಡಿತ್ತು. ಈಗ ಮತ್ತೆ ಕ್ರಿಕೆಟ್ ಕಲರವ ಚಿನ್ನಸ್ವಾಮಿ ಮೈದಾನದಲ್ಲಿ ಕೇಳಿಸಲಿದೆ. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಗೌರವ ಉಳಿಸಲು ಬೇಕಾದ ಕ್ರಮ ಕೈಗೊಂಡಿದ್ದೇವೆ. ಮುಂದೆ ಇಂತಹ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ, ಚಿನ್ನಸ್ವಾಮಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವೆಂಕಟೇಶ್ ಪ್ರಸಾಸ್ ಅವರ ತಂಡ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದೆ. ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಜವಾಬ್ದಾರಿಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ನೀಡಲಾಗಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಮೂಲಕ ಇತ್ತೀಚಿಗೆ ಚುನಾವಣೆಯಲ್ಲಿ ಜಯ ಸಾಧಿಸಿದ ಗೇಮ್ ಚೇಂಜರ್ ಬಣದ ವೆಂಕಟೇಶ್ ಪ್ರಸಾದ್ ಸಾರಥ್ಯಕ್ಕೆ ಆರಂಭಿಕ ಗೆಲುವು ಸಿಕ್ಕಂತೆ ಆಗಿದೆ.