
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವರ್ತನೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣ ಕೊಲ್ಕತ್ತಾದಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ರದ್ದುಗೊಳಿಸಲಾಗಿತ್ತು.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯ ಮಳೆಯ ಕಾರಣದಿಂದ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಎರಡನೇ ಪಂದ್ಯವನ್ನು ಲ್ಕನೋದಲ್ಲಿ ಮತ್ತು ಮೂರನೇ ಪಂದ್ಯವನ್ನು ಕೊಲ್ಕತ್ತಾದಲ್ಲಿ ಆಯೋಜನೆಗೊಳಿಸಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಆರಂಭದಲ್ಲಿ ಈ ಎರಡೂ ಪಂದ್ಯಗಳನ್ನು ವೀಕ್ಷಕರಿಲ್ಲದೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು.
ಆದರೆ ಬಳಿಕ ಬಿಸಿಸಿಐ ಕೊರೊನಾ ಕಾರಣಕ್ಕೆ ಈ ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು. ಆದರೆ ಈ ಸಂದರ್ಭದಲ್ಲಿ ಪಶ್ವಿಮ ಬಂಗಾಳ ಸರ್ಕಾರಕ್ಕೆ ಬಿಸಿಸಿಐ ಆಗಲಿ ಅಧತವಾ ಅದರ ಅಧ್ಯಕ್ಷ ಕೊಲ್ಕತ್ತಾದವರೇ ಆದ ಸೌರವ್ ಗಂಗೂಲಿ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲವಂತೆ. ಇದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.
ಯಾವುದೇ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜನೆ ಮಾಡಬೇಕಾದರೂ ಸ್ಥಳೀಯ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಮಾಡಬೇಕಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ಒಂದಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಹೀಗಾಗಿ ಸರಣಿ ಆಯೋಜನೆ ಮಾಡುವ ಮುನ್ನ ಸಂಪರ್ಕಿಸುವ ಆಯೋಜಕರು ರದ್ದುಗೊಳಿಸುವ ಸಂದರ್ಭದಲ್ಲಿ ಒಂದು ಮಾಹಿತಿ ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಮಾಧ್ಯಮದ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಈ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಾನು ಗೌರವದಿಂದಲೇ ಹೇಳಿತ್ತಿದ್ದೇನೆ, ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗಾಗಲಿ, ಗೃಹಕಾರ್ಯದರ್ಶಿಯವರಿಗಾಗಲಿ ಅಥವಾ ಪೊಲೀಸ್ ಕಮಿಷನರ್ ಅವರಿಗಾಗಲಿ ಅಥವಾ ರಾಜ್ಯಸರ್ಕಾರದ ಯಾರಿಗಾದರೂ ಯಾವ ಕಾರಣಕ್ಕೆ ಮಾಹಿತಿ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ