ಟೀಮ್ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಆಡುವಾಗ, ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುವಾಗ, ಅಷ್ಟೇ ಏಕೆ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳುವಾಗಲು ಟೀಮ್ ಇಂಡಿಯಾ ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆ ಒಂದೇ ಆಗಿತ್ತು. ಸ್ಟಾರ್ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ತಂಡಕ್ಕೆ ಕಂ ಬ್ಯಾಕ್ ಮಾಡುವುದು ಯಾವಾಗ? ಈ ಪ್ರಶ್ನೆ ಕೇಳಿ ಕೇಳಿ ಅಭಿಮಾನಿಗಳು ಸುಸ್ತಾಗಿರುವ ಹೊತ್ತಿನಲ್ಲೇ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಸತತ ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಶಮಿ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಪರ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ.
ಸದ್ಯ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಮೊಹಮ್ಮದ್ ಶಮಿ ತಮ್ಮ ಫಿಟ್ನೆಸ್ ಸಾಬಿತು ಪಡಿಸಿದ್ದಾರೆ. ಇವರು ಬಂಗಾಳ ತಂಡದ ಪರ ರಣಜಿ, ಸೈಯದ್ ಮುಷ್ತಾಕ್ ಅಲಿ, ವಿಜಯ್ ಹಜಾರೆ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಈಗ ಇವರು ಬ್ಲ್ಯೂ ಜೆರ್ಸಿಯಲ್ಲಿ ಮಿಂಚುವ ಕಾಲ ಸನಿಹವಾಗಿವೆ. ಎಲ್ಲವೂ ಅಂದುಕೊಂಡಂತೆ ಆದರೆ ಐಸಿಸಿ ಟೂರ್ನಿಯಲ್ಲೇ ಶಮಿ ಮತ್ತೆ ತಂಡಕ್ಕೆ ಕಂ ಬ್ಯಾಕ್ ಮಾಡಲಿದ್ದಾರೆ.

ಮೊಹಮ್ಮದ್ ಶಮಿ ಬಗ್ಗೆ ರೆವ್ ಸ್ಪೋರ್ಟ್ಸ್ನ ಇತ್ತೀಚಿನ ವರದಿಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವ ತಂಡದಲ್ಲಿ ಶಮಿ ಸ್ಥಾನ ಪಡೆಯುವುದು ಖಚಿತವೆಂದು ಪರಿಗಣಿಸಲಾಗಿದೆ. ಅಂದರೆ ಫೆಬ್ರವರಿ 19ರಿಂದ ಆರಂಭವಾಗಲಿರುವ ಟೂರ್ನಿಯಲ್ಲಿ ಶಮಿ ಮ್ಯಾಜಿಕ್ ನೋಡಬಹುದಾಗಿದೆ. ದೇಶೀಯ ಟೂರ್ನಿಯಲ್ಲಿ ಶಮಿ ಸಿಕ್ಕ ಅವಕಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ತಮ್ಮಲ್ಲಿನ ಕ್ಷಮತೆಯನ್ನು ಸಾಬೀತು ಪಡಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ತಂಡಗಳನ್ನು ಜನವರಿ 12ರೊಳಗೆ ಪ್ರಕಟಿಸಬೇಕಾಗಿದೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಸಭೆ ಇದೇ 11 ರಂದು ಮುಂಬೈನಲ್ಲಿ ನಡೆಯಲಿದೆ. ಈ ಸಭೆಯ ವೇಳೆ ತಂಡದ ಬಗ್ಗೆ ಚರ್ಚಿಸಿ, ಸಭೆಯ ಬಳಿಕ ತಂಡವನ್ನು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಚಾಂಪಿಯನ್ಸ್ ಟ್ರೋಫಿಯಲ್ಲೂ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ ಪ್ರಕಟವಾಗುವ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಟಿ20 ಕ್ರಿಕೆಟ್ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಅರ್ಷದೀಪ್ ಸಿಂಗ್ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಅಬ್ಬರ ನಡೆಸಿರುವ ಯಶಸ್ವಿ ಜೈಸ್ವಾಲ್ರನ್ನು ತಂಡದಲ್ಲಿ ಕಾಣಬಹುದಾಗಿದೆ. ಇನ್ನು ವಿಜಯ್ ಹಜಾರೆ ಟೂರ್ನಿಯಲ್ಲಿ ರನ್ ಕಲೆ ಹಾಕಿ ಬಿಸಿಸಿಐ ಆಯ್ಕೆ ಸಮಿತಿಯ ಕದ ತಟ್ಟುತ್ತಿರುವ ಮಯಾಂಕ್ ಅಗರ್ ವಾಲ್ ಹಾಗೂ ಕರುಣ್ ನಾಯರ್ ಅವರಿಗೆ ಸ್ಥಾನ ಲಭಿಸುತ್ತದಾ ಎಂಬ ಬಗ್ಗೆಯೂ ಆಯ್ಕೆ ಸಮಿತಿಯ ಸಭೆಯಲ್ಲಿ ನಿರ್ಧಾರವಾಗಲಿದೆ.
ಮೊಹಮ್ಮದ್ ಶಮಿ ಭಾರತದಲ್ಲಿ ನಡೆದಿದ್ದ ಏಕದಿನ ಸರಣಿಯ ಫೈನಲ್ ಪಂದ್ಯದ ಬಳಿಕ ತಂಡದಿಂದ ಹೊರಗುಳಿದಿದ್ದರು. ಇವರು ಏಕದಿನ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್. ಇವರು ಪಾದದ ಗಾಯದ ಸಮಸ್ಯೆಯಿಂದ ಬಳಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡು, ಈಗ ಮೈದಾನಕ್ಕೆ ಇಳಿಯಲು ಸಿದ್ಧರಾಗುತ್ತಿದ್ದಾರೆ.