ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಮುಂಬೈ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಸ್ಥಿರ ಪ್ರದರ್ಶನ ನೀಡಿ ಮತ್ತೊಮ್ಮೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಆರ್ಸಿಬಿ ತಂಡದ ಸ್ಟಾರ್ ಆಟಗಾರ ರಜತ್ ಪಾಟಿದಾರ್ ಅವರ ಮುಂದಾಳತ್ವದ ಮಧ್ಯಪ್ರದೇಶ ತಂಡ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ನಿರಾಸೆ ಅನುಭವಿಸಿತು.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದು ಬ್ಯಾಟ್ ಮಾಡಿದ ಮಧ್ಯ ಪ್ರದೇಶ 20 ಓವರ್ಗಳಲ್ಲಿ 8 ವಿಕೆಟ್ಗೆ 174 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ 17.5 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಸೇರಿಸಿ ಜಯ ಸಾಧಿಸಿತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ ತಂಡದ ಆರಂಭ ಕಳಪೆಯಾಗಿತ್ತು. ಅರ್ಪಿತ್ ಗೌಡ್ ಹಾಗೂ ಹರ್ಷ ಗ್ವಾಲಿ ಸಿಂಗಲ್ ಡಿಜಿಟ್ನಲ್ಲಿ ಆಟ ಮುಗಿಸಿದರು. ಆರು ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಹರ್ಪ್ರಿತ್ ಸಿಂಗ್ ಹಾಗೂ ಸುಭ್ರಾಂಶು ಸೇನಾಪತಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೊಡಿ 34 ಎಸೆತಗಳಲ್ಲಿ 42 ರನ್ ಸೇರಿಸಿತು.
ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ರಜತ್ ಪಾಟಿದಾರ್ ತಮ್ಮ ಮೇಲೆ ತಂಡ ಇಟ್ಟಿದ್ದ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಇವರು 40 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ಸಹಾಯದಿಂದ 81 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಆರನೇ ವಿಕೆಟ್ಗೆ ರಜತ್ ಪಾಟಿದಾರ್ ಹಾಗೂ ರಾಹುಲ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 32 ಎಸೆತಗಳಲ್ಲಿ 56 ರನ್ ಸಿಡಿಸಿತು.
ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಪೃಥ್ವಿ ಶಾ (10), ಶ್ರೇಯಸ್ ಅಯ್ಯರ್ (16) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಮೂರನೇ ವಿಕೆಟ್ಗೆ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಆರಂಭಿಕ ಅಜಿಂಕ್ಯ ರಹಾನೆ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 41 ಎಸೆತಗಳಲ್ಲಿ 52 ರನ್ ಸೇರಿಸಿತು. ಸೂರ್ಯಕುಮಾರ್ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 48 ರನ್ ಬಾರಿಸಿದರೆ, ರಹಾನೆ 37 ರನ್ ಸಿಡಿಸಿದರು.
ಒಂದು ಹಂತದಲ್ಲಿ ಮುಂಬೈ 129 ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಅಥರ್ವ ಅಂಕೋಲೇಕರ್ (16) ಹಾಗೂ ಸೂರ್ಯಾಂಶ್ ಶೆಡ್ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಜಸ್ಟ್ 19 ಎಸೆತಗಳಲ್ಲಿ ಅಜೇಯ 51 ರನ್ ಸಿಡಿಸಿ ತಂಡಕ್ಕೆ ಆಧಾರವಾಯಿತು. ಸೂರ್ಯಾಂಶ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಕೇವಲ 15 ಎಸೆತಗಳಲ್ಲಿ ಅಜೇಯ 36 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮಿಂಚಿದರು.